ಬೆಂಗಳೂರು ಡಿಜೆ ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಆರೋಪಿ

ಬೆಂಗಳೂರು: ಎರಡು ತಿಂಗಳ ಹಿಂದೆ ಬೆಂಗಳೂರಿನ ಡಿಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿಹಚ್ಚಿ ಗಲಭೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸೋಮವಾರ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಸ್ಥಳೀಯ ಕಾಂಗ್ರೆಸ್‌ ಮುಖಂಡರು ರಾಜಕೀಯ ದ್ವೇಷ ಸಾಧಿಸುತ್ತಿದ್ದರು. ಇದೇ ಗಲಭೆಗೆ ಮುಖ್ಯ ಕಾರಣ ಎಂದು ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮೇಯರ್ ಆರ್‌. ಸಂಪತ್ ರಾಜ್, ಅವರ ಆಪ್ತ ಸಹಾಯಕ ಅರುಣಕುಮಾರ್ , ಕಾರು ಚಾಲಕ ಸಂತೋಷ್ ಹಾಗೂ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಅಬ್ದುಲ್ ಜಾಕೀಬ್ ಜಾಕೀರ್ ಸೇರಿದಂತೆ 90 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ.

ಗಲಭೆಯಲ್ಲಿ ಶಾಸಕರ ಮನೆ, ಕಚೇರಿ ಹಾಗೂ ಅಕ್ಕ–ಪಕ್ಕದ ಮನೆಗಳಿಗೆ ಬೆಂಕಿಹಚ್ಚಿದ ಕುರಿತಂತೆ ಮಾತ್ರ ಈ ದೋಷಾರೋಪ ಪಟ್ಟಿ ಉಲ್ಲೇಖಿಸಲಾಗಿದೆ.

ಕೃತ್ಯದಲ್ಲಿ ಭಾಗಿಯಾಗಿರುವ ಸಂಪತ್‌ ರಾಜ್ ಸದ್ಯ ಕೊರೊನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಣಮುಖರಾದ ನಂತರ ಬಂಧಿಸಿ ತನಿಖೆಗೆ ಒಳಪಡಿಸಿ ಮತ್ತೊಂದು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣಗಳ ವಿಚಾರಣೆ ಮುಂದುವರಿದಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.