ವಿಶ್ವ ಬೈಸಿಕಲ್ ದಿನಾಚರಣೆ : ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮಲ್ಪೆ ಬೀಚ್‌ವರೆಗೆ ಬೈಸಿಕಲ್ ಜಾಥಾ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ನೆಹರು ಯುವ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಶ್ವ ಬೈಸಿಕಲ್ ದಿನಾಚರಣೆಯ ಪ್ರಯುಕ್ತ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮಲ್ಪೆ ಬೀಚ್‌ವರೆಗೆ ನಡೆದ ಬೈಸಿಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.

ಜಾಥಾದಲ್ಲಿ ಡಿ.ಎಫ್.ಓ ಆಶಿಶ್ ರೆಡ್ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸೈಕ್ಲಿಸ್ಟ್ ಗಳು ಹಾಗೂ ನಾಗರಿಕರು ಭಾಗವಹಿಸಿದ್ದರು.

ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿಸೋಜಾ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ವಂದಿಸಿದರು.

ಸೈಕ್ಲಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಂತೋಷ್ ಕುಮಾರ್, ಜಾನ್ ರಾಬರ್ಟ್ ಡಿ ಸಿಲ್ವಾ, ರಾಜೇಶ್ ನಾಯಕ್, ಡಾ. ತಿಲಕ್ ಚಂದ್ರ ಪಾಲ್, ಡಾ. ರಾಜೇಶ ಭಕ್ತ, ಡಾ. ಗುರುರಾಜ್ ಕೃಷ್ಣಮೂರ್ತಿ, ರಾಷ್ಟ್ರಮಟ್ಟದ ಸೈಕ್ಲಿಸ್ಟ್ ಶ್ರೀನಿಧಿ ಉರಾಳ, ಅಂತರಾಷ್ಟ್ರೀಯ ಮಟ್ಟದ ಸೈಕ್ಲಿಸ್ಟ್ ಗಳಾದ ಗಣೇಶ್ ನಾಯಕ್ ಹಾಗೂ ಹರ್ಷೇಂದ್ರ ಅವರನ್ನು ಸನ್ಮಾನಿಸಲಾಯಿತು.