ಶಿವಪಾಡಿ: ನವೆಂಬರ್ 14-15 ರಂದು ಬಿಜೆಪಿ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ

ಶಿವಪಾಡಿ : ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಎರಡು ದಿನಗಳ ಪ್ರಶಿಕ್ಷಣ ವರ್ಗವು ನವೆಂಬರ್ 14 ಮತ್ತು15 ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಜರಗಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.

ನವೆಂಬರ್ 14 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ. ನವೆಂಬರ್ 15 ರಂದು ಮಧ್ಯಾಹ್ನ ಗಂಟೆ 1.00ಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷ ಕೆ. ಉದಯಕುಮಾರ್ ಶೆಟ್ಟಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಹಿಳಾ ಮೋರ್ಚಾದ ಸದಸ್ಯೆಯರನ್ನು ಸಂಘಟನಾತ್ಮಕ ವಿಚಾರಗಳಲ್ಲಿ ದೃಢತೆಯಿಂದ ಕಾರ್ಯನಿರ್ವಹಿಸಲು ಸಜ್ಜುಗೊಳಿಸುವ ಉದ್ದೇಶದಿಂದ ಈ ಪ್ರಶಿಕ್ಷಣ ವರ್ಗ ಜರಗಲಿದೆ. ಎರಡು ದಿನಗಳ ಪರ್ಯಂತ ಜರಗಲಿರುವ ಈ ಪ್ರಶಿಕ್ಷಣ ವರ್ಗದಲ್ಲಿ ವಿವಿಧ ಗೋಷ್ಠಿಗಳು, ಉದ್ಘಾಟನೆ, ಸಮಾರೋಪ, ಬೌದ್ಧಿಕ ಆಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಅಪೇಕ್ಷಿತ ಮಹಿಳಾ ಕರ‍್ಯಕರ್ತೆಯರು ಈ ಪ್ರಶಿಕ್ಷಣ ವರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವೀಣಾ ಎಸ್. ಶೆಟ್ಟಿ ವಿನಂತಿಸಿದ್ದಾರೆ.