ಬಿಜೆಪಿಗೆ ಅಧಿಕಾರ ದುರುಪಯೋಗದ ಗೆಲುವು: ಪರಮೇಶ್ವರ್

ಉಡುಪಿ: ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ ಎಂದು ಕಾಂಗ್ರೆಸ್‌ ನಾಯಕ ಜಿ.ಪರಮೇಶ್ವರ್ ಹೇಳಿದರು.

ಮಂಗಳವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆಯಾಗಿಲ್ಲ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಾತಿ ಜನಗಣತಿಗೆ ಸರ್ಕಾರದ ₹ 150 ಕೋಟಿ ಖರ್ಚಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ವರದಿ ಪೂರ್ಣಗೊಳ್ಳದ ಕಾರಣ ಸಲ್ಲಿಕೆಯಾಗಿರಲಿಲ್ಲ. ಈಗ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಶೀಘ್ರ ಸದನದಲ್ಲಿ ಮಂಡಿಸಬೇಕು. ವರದಿಯಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸಬಹುದು ಎಂದು ಜಿ.ಪರಮೇಶ್ವರ್ ಹೇಳಿದರು.

ಕಾಂಗ್ರೆಸ್‌ನಲ್ಲಿ ಯಾವ ಗುಂಪುಗಾರಿಕೆಯೂ ಇಲ್ಲ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರೆ, ಸಿದ್ದರಾಮಯ್ಯ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಇಬ್ಬರಿಗೂ ಜವಾಬ್ದಾರಿಗಳಿದ್ದು, ಗುಂಪುಗಾರಿಕೆ ಮಾಡಲು ಅವಕಾಶವಿಲ್ಲ. ಗುಂಪುಗಾರಿಕೆ ಕೇವಲ ಮಾಧ್ಯಮಗಳ ಸೃಷ್ಟಿ ಎಂದರು.