ಉಡುಪಿ: ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ವತಿಯಿಂದ “ಮರಾಟಿ ಹೋಳಿ ಸಂಭ್ರಮ -2026” ಅನ್ನು ಇದೇ ಮಾರ್ಚ್ 1ರಂದು ಸಂಜೆ 4ಗಂಟೆಗೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಮುಂಡ್ಕಿನಜೆಡ್ಡು ಆರ್.ಕೆ. ಪಾಟ್ಕರ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅನಾದಿ ಕಾಲದಿಂದಲೂ ಆಚರಿಸಿಕೊಂಡು ಬಂದಿರುವ ಈ ಸಂಪ್ರದಾಯವನ್ನು ವಿಶ್ವಕ್ಕೆ ಪಸರಿಸಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಈ ಸಂಭ್ರಮದಲ್ಲಿ ಉಡುಪಿ ಜಿಲ್ಲೆಯ 136 ಹತ್ತರಕಟ್ಟೆಗಳ 3 ಸಾವಿರಕ್ಕೂ ಅಧಿಕ ಸಾಂಪ್ರದಾಯಿಕ ಹೋಳಿ ವೇಷಧಾರಿಗಳು ಭಾಗವಹಿಸಲಿದ್ದಾರೆ. ಸುಮಾರು ಏಳೆಂಟು ಸಾವಿರ ಮಂದಿ ಈ ಸಂಭ್ರಮವನ್ನು ವೀಕ್ಷಣೆ ಮಾಡಲಿದ್ದಾರೆ ಎಂದರು.
ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಟಿ. ನಾಯ್ಕ್ ಚಾಂತಾರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆ.ಟಿ. ನಾಯ್ಕ್ ಚಾಂತಾರು, ಪ್ರಧಾನ ಕಾರ್ಯದರ್ಶಿ ಭುಜಂಗ ನಾಯ್ಕ್ ಮಣಿಪಾಲ, ಸಮಿತಿಯ ಬ್ರಹ್ಮಾವರ ತಾಲೂಕು ಸಂಚಾಲಕ ನಾರಾಯಣ ನಾಯ್ಕ್ ಮುಂಡ್ಕಿನಜೆಡ್ಡು, ಉಡುಪಿ-ಕಾಪು ಸಂಚಾಲಕ ವೆಂಕಟೇಶ್ ನಾಯ್ಕ್ ಅಂಜಾರು ಉಪಸ್ಥಿತರಿದ್ದರು.
















