ಉಡುಪಿ: ಮದುವೆಗೆ ಒಪ್ಪದ ಕಾರಣಕ್ಕಾಗಿ ಯುವತಿಗೆ ಚೂರಿ ಇರಿದು ಹತ್ಯೆಗೈದ ಪಾಗಲ್ ಪ್ರೇಮಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ.
ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾಳೆ.
ಬಾವಿಗೆ ಹಾರಿ ಆತ್ಮಹತ್ಯೆ:
ಯುವತಿಗೆ ಚೂರಿ ಇರಿದ ಕಾರ್ತಿಕ್ ಅಲ್ಲೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












