‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ’ KSRTCಗೆ ಬ್ರ್ಯಾಂಡ್ ಪ್ರಶಸ್ತಿ

ಬೆಂಗಳೂರು:ಈ ಬಾರಿ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಲಭಿಸಿದ್ದು, ಕೆಎಸ್‌ಆರ್‌ಟಿಸಿ ಮುಕುಟಕ್ಕೆ ಜಾಗತಿಕ ಮನ್ನಣೆ ಸಿಕ್ಕಂತಾಗಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಅತ್ಯುತ್ತಮ ಸಂಚಾರ ಸೇವೆ ಒದಗಿಸುತ್ತಿರುವ ಸಂಸ್ಥೆಗಳಲ್ಲಿ ಪ್ರಮುಖ ಸಂಸ್ಥೆಯಾಗಿರುವ ಕೆಎಸ್‌ಆರ್‌ಟಿಸಿಯನ್ನು ಪ್ರತಿ ವರ್ಷವೂ ಒಂದಿಲ್ಲೊಂದು ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ.ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಆಯ್ಕೆಯಾಗಿದೆ.

ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ನಿಗಮವು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿದೆ. ಇಂದು ಸಿಂಗಾಪುರ​​ದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮದ ಪರವಾಗಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರ್ತಿ ಮಂಜುಳ ನಾಯ್ಕ್, ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್ ಪ್ರಶಸ್ತಿ ಸ್ವೀಕರಿಸಿದರು.

ಕೆಎಸ್​ಆರ್​ಟಿಸಿ ನಾಲ್ಕು ಸಂಸ್ಥೆಗಳಾಗಿ ವಿಭಜನೆ: ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸೇವೆ ಒದಗಿಸಲು ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಸರ್ಕಾರವು ಕೆಎಸ್​ಆರ್​ಟಿಸಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಸ್ಥೆಗಳನ್ನಾಗಿ ವಿಭಜಿಸಿದೆ. 1996-97ರ ವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಏಕೀಕೃತ ಸಂಸ್ಥೆಯಾಗಿಯೇ ಕಾರ್ಯನಿರ್ವಹಿಸುತ್ತಿತ್ತು. ಆದರೆ 1997-98ನೇ ಸಾಲಿನಲ್ಲಿ ಸರ್ಕಾರವು ಕ.ರಾ.ರ.ಸಾ ಸಂಸ್ಥೆಯಿಂದ ಎರಡು ಹೊಸ ಸಂಸ್ಥೆಗಳನ್ನು ಹುಟ್ಟುಹಾಕಿತು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಾಗಿ ಹೊಸದಾಗಿ ಪ್ರಾರಂಭಿಸಿತು.

ಹೊಸ ಸೇವೆಗಳನ್ನು ಪರಿಚಯಿಸುವ ಮೂಲಕ ದೇಶದ ಗಮನ ಸೆಳೆದಿರುವ ಕೆಎಸ್‌ಆರ್‌ಟಿಸಿ ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. 2018-19ರಲ್ಲಿ ಜೀವನಮಟ್ಟ ಸುಧಾರಿಸುವ ಉತ್ತಮ ಉಪಕ್ರಮಗಳ ಪ್ರಶಸ್ತಿ, ಅತ್ಯುತ್ತಮ ಪ್ರಯಾಣಿಕ ಸಾರಿಗೆ ಸಂಸ್ಥೆ ವಿಭಾಗದಲ್ಲಿ ಎಕ್ಸೆಲೆನ್ಸಿ ಪ್ರಶಸ್ತಿ ಪಡೆಯಲಾಗಿತ್ತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 2020ರಲ್ಲಿ ಶ್ರೀ ಶೌಚಾಲಯ ಮತ್ತು ಮೊಬೈಲ್ ಫೀವರ್ ಕ್ಲಿನಿಕ್ ಅಭಿವೃದ್ಧಿಪಡಿಸಿದ್ದಕ್ಕಾಗಿ ರಾಷ್ಟ್ರೀಯ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ ಪಡೆದುಕೊಂಡಿತ್ತು. 2021ರಲ್ಲಿ ಭಾರತೀಯ ಸಾರ್ವಜನಿಕ ಮಂಡಳಿ ನೀಡುವ ಪಿಆರ್​​ಸಿಐ ಎಕ್ಸಲೆನ್ಸ್ ಪ್ರಶಸ್ತಿಯನ್ನು ಐದು ವರ್ಗದಲ್ಲಿ ಸಾಧಿಸಿದೆ. ಇದೀಗ ಈ ಬಾರಿ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಪಡೆದುಕೊಂಡು ಸಾರಿಗೆ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.