ಕೇಂದ್ರದ ಬಜೆಟ್‌ ಕರ್ನಾಟಕ ಪಾಲಿಗೆ ನಿರಾಸೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕೊಪ್ಪಳ : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೆ ಪದೇ ಅನ್ಯಾಯ ಆಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಟೀಕಿಸಿದ್ದಾರೆ.

ಕೊಪ್ಪಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕಕ್ಕೆ ಬರಬೇಕಿದ್ದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ, ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಚೆಯಂಥ ಹಿರಿಯ ನಾಯಕರು ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡುತ್ತಿಲ್ಲ ಎಂದು ಸಚಿವರು ಹೇಳಿದರು.

ಮಹೇಶ್‌ ಟೆಂಗಿನಕಾಯಿ ಒಂಥರ ಬಲೂನ್‌ ಇದ್ದಂಗೆ:

ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಇನ್ನಿಲ್ಲದ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಶಾಸಕ ಮಹೇಶ್‌ ಟೆಂಗಿನಕಾಯಿ ಒಂಥರ ಬಲೂನ್‌ ಇದ್ದಂಗೆ, ಯಾವಾಗ ಗಾಳಿ ಹೋಗುತ್ತದೆ ಗೊತ್ತಿಲ್ಲ. ಅವರಿಗೆ ಬೇರೆ ಯಾವುದೇ ಕೆಲಸವಿಲ್ಲದೇ ಈ ರೀತಿ ಅನಾವಶ್ಯಕವಾಗಿ ಅವರು ಮಾತನಾಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಿಡಿಕಾರಿದರು.

ಹಿಂದಿನ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಭ್ರಮನಿರಸಗೊಂಡಿದ್ದರು. ಕೊಟ್ಟ ಮಾತಿನಂತೆ ನಾವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಇದುವರೆಗೂ 26 ತಿಂಗಳ ಕಂತು ಬಿಡುಗಡೆಯಾಗಿದ್ದು, ಮನೆ ಮನೆಗೆ ನಮ್ಮ ಯೋಜನೆಗಳು ತಲುಪುತ್ತಿವೆ. ಕಳೆದ ವರ್ಷದ ಫೆಬ್ರವರಿ, ಮಾರ್ಚ್‌ ತಿಂಗಳ ಹಣ ಬಿಡುಗಡೆ ಕುರಿತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಹಣಕಾಸು ಇಲಾಖೆಯವರು ಇಷ್ಟರಲ್ಲೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.