ಕೂಡಲ ಸಂಗಮ ಕ್ಷೇತ್ರದ ಕಾಮಗಾರಿ ಜನವರಿಯೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲ ಸಂಗಮ ಕ್ಷೇತ್ರದ ಎಲ್ಲಾ ಕಾಮಗಾರಿಗಳನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸೂಚನೆ ನೀಡಿದ್ದಾರೆ.

ಗುರುವಾರ ಇಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ 16ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣ ಅಂತರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಪ್ರದರ್ಶನ ಹಾಗೂ ಕೂಡಲ ಸಂಗಮ ವಾಣಿಜ್ಯ ಸಂಕೀರ್ಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿಗಳು ಬಸವಣ್ಣವರ ಬದುಕು, ಸಿದ್ಧಾಂತಗಳನ್ನು ಪರಿಣಾಮಕಾರಿಯಾಗಿ ಎತ್ತಿ ಹಿಡಿಯಬೇಕು ಎಂದರು.

ಕಂದಾಯ ಸಚಿವ ಆರ್.ಅಶೋಕ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ ನಿರಾಣಿ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್, ಎಂಎಲ್ಸಿ ಪ್ರಕಾಶ ಹುಕ್ಕೇರಿ, ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.