ಕೊರಗ ಜನಾಂಗದವರ ವೈದ್ಯಕೀಯ ವೆಚ್ಚ ಮರುಪಾವತಿ ಯೋಜನೆ ಮುಂದುವರಿಸಲು ಮುಖ್ಯಮಂತ್ರಿ ಸೂಚನೆ: 3 ಜಿಲ್ಲೆಗಳ ಶಾಸಕರ ನಿಯೋಗದ ಮನವಿಗೆ ಬೊಮ್ಮಾಯಿ ಸ್ಪಂದನೆ

ಉಡುಪಿ: ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಶಾಸಕ ಕೆ ರಘುಪತಿ ಭಟ್ ನೇತೃತ್ವದಲ್ಲಿ 3 ಜಿಲ್ಲೆಗಳ ಶಾಸಕರ ನಿಯೋಗವು ಸೆಪ್ಟಂಬರ್ 14 ರಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರ ವೈದ್ಯಕೀಯ ವೆಚ್ಚವನ್ನು 2023ನೇ ಸಾಲಿನಿಂದ ನಿಗದಿಪಡಿಸಿದ ಅನುದಾನದಲ್ಲಿ ವೈದ್ಯಕೀಯ ವೆಚ್ಚ ಮರುಪಾವತಿಗೆ ಒಂದು ಬಾರಿ ಮಾತ್ರ ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಸರ್ಕಾರ ಆದೇಶಿಸಿದೆ. ಹೆಚ್ಚಾಗಿ ನಗರ ಪ್ರದೇಶದಿಂದ ದೂರವಿದ್ದು ಕಾಡಂಚಿನಲ್ಲಿ ವಾಸವಿರುವ ಈ ಸಮುದಾಯಗಳ ಮಂದಿ ರಕ್ತ ಹೀನತೆ, ಅಪೌಷ್ಟಿಕತೆ, ಟಿಬಿ, ಕ್ಯಾನ್ಸರ್, ಮಧುಮೇಹ ಮುಂತಾದ ತೀವ್ರ ತರಹದ ಕಾಯಿಲೆಗಳಿಗೆ ತುತ್ತಾದಾಗ ಪರಿಣಾಮಕಾರಿಯಾದ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಮರಣ ಹೊಂದುತ್ತಾರೆ. ಅಲ್ಲದೆ ಈ ಸಮುದಾಯದವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ವಿಮಾ ಯೋಜನೆಗಳು ಉಪಯುಕ್ತವಾಗದೆ ಇರುವುದರಿಂದ ವೈದ್ಯಕೀಯ ವೆಚ್ಚ ಮರುಪಾವತಿ ಅವಶ್ಯವಾಗಿರುತ್ತದೆ.

ಈ ವಿಷಯದ ಬಗ್ಗೆ 3 ಜಿಲ್ಲೆಗಳ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಸಕಾರಾತ್ಮಕವಾಗಿ ಸ್ಪಂದಿಸಿದ್ದು, “ಮುಂದುವರೆಸುವುದು” ಎಂದು ಷರಾ ಬರೆದು ವೈದ್ಯಕೀಯ ವೆಚ್ಚ ಮರುಪಾವತಿ ಮುಂದುವರೆಸಿ ತಕ್ಷಣದಲ್ಲಿ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ದೂರವಾಣಿ ಕರೆ ಮೂಲಕ ಸೂಚಿಸಿದ್ದಾರೆ.

ಪರಿಶಿಷ್ಟ ಪಂಗಡ, ನೈಜ ದುರ್ಬಲ ಬುಡಕಟ್ಟು ಸಮುದಾಯ, ಕೊರಗ ಸಮುದಾಯದವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಈ ಹಿಂದಿನಂತೆಯೇ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡುವುದು ಹಾಗೂ ಈ ಸಮುದಾಯಗಳು ವಾಸವಾಗಿರುವ ಕಾಲೋನಿಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ನಡೆಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಶಾಸಕರ ನಿಯೋಗದಲ್ಲಿ   ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬೈಂದೂರು ಶಾಸಕ ಎಂ. ಸುಕುಮಾರ್ ಶೆಟ್ಟಿ, ಮಂಗಳೂರು ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಭಟ್ಕಳ ಶಾಸಕ ಸುನಿಲ್ ನಾಯ್ಕ್, ಕುಮಟಾ ಶಾಸಕ ದಿನಕರ ಶೆಟ್ಟಿ, ಕಾರವಾರ ಶಾಸಕಿ ರೂಪಾಲಿ ನಾಯ್ಕ್ ಉಪಸ್ಥಿತರಿದ್ದರು.