ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿ.ಎಂ ಮಾರ್ಗದರ್ಶಿ ಕಾರ್ಯಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

ಉಡುಪಿ: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಮಾರ್ಗದರ್ಶಿ ಎಂಬ ಯೋಜನೆ ರೂಪಿಸಿದ್ದು, ಯುವಜನತೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡು ಪುರಭವನದ ಬಳಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಮತ್ತು ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಡಿಜಿಟಲ್ ಗ್ರಂಥಾಲಯ ಹಾಗೂ ಡಾ.ಬನ್ನಂಜೆ ಗೋವಿಂದಾಚಾರ್ಯರವರ ಪುತ್ಥಳಿ ಅನಾವರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಿಎಂ ಮಾರ್ಗದರ್ಶಿ ಯೋಜನೆಯ ಮೂಲಕ, ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು, ಪರೀಕ್ಷಾ ವಿಧಾನ, ಹಿಂದಿನ ಪ್ರಶ್ನೆ ಪತ್ರಿಕೆಗಳನ್ನು ಸಾಫ್ಟ್ವೇರ್‌ನಲ್ಲಿ ಅಳವಡಿಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತು ತಮ್ಮ ಕಂಪ್ಯೂಟರ್, ಮೊಬೈಲ್, ಲ್ಯಾಪ್ ಟಾಪ್ ಮೂಲಕ ಅಧ್ಯಯನ ಮಾಡಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಾಧ್ಯವಾಗಲಿದೆ ಎಂದರು.

ಇಂದಿನ ಯುವ ಜನತೆಯಲ್ಲಿ ಬಹಳಷ್ಟು ವಿಚಾರಗಳ ಬಗ್ಗೆ ಸ್ಪಷ್ಟತೆ ಇದೆ. ದೇಶದ ಬಗ್ಗೆ, ನಾಡಿನ ಬಗ್ಗೆ, ಬದುಕಿನ ಬಗ್ಗೆ, ಆದರ್ಶಗಳನ್ನು ತುಂಬಿಕೊಂಡಿದ್ದಾರೆ. ಯುವಕರು ತಾವು ನಂಬಿರುವ ಆದರ್ಶಗಳನ್ನು ಎಂದಿಗೂ ಕೈ ಬಿಡಬಾರದು ಅವೇ ಅವರಿಗೆ ದಾರಿದೀಪ. ನಿಮ್ಮ ಮೇಲೆ ನಂಬಿಕೆ ಇಡಿ, ಯುವಕರು ತಮ್ಮ ಅಸ್ಥಿತ್ವ ಮತ್ತು ಸಾಧನೆ ಮೇಲೆ ನಂಬಿಕೆ ಇಟ್ಟುಕೊಂಡಲ್ಲಿ ಇಡೀ ಜಗತ್ತು ಗೆಲ್ಲಬಹುದು. ಚಾರಿತ್ರ್ಯವಂತ ಸಮಾಜ ನಿರ್ಮಾಣವಾದಲ್ಲಿ ದೇಶ ಸದೃಢವಾಗಲಿದೆ. ಆದ್ದರಿಂದ ಮಹನೀಯರ ಆಚರಣೆಗಳನ್ನು ಪಾಲಿಸಬೇಕು ಎಂದರು.

ತತ್ವಜ್ಞಾನ ಮತ್ತು ವಿಜ್ಞಾನ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ವಿಶ್ವದ ಬಹಳಷ್ಟು ವಿಜ್ಞಾನಿಗಳು ತತ್ವಜ್ಞಾನದಿಂದ ಪ್ರಭಾವಿತರಾಗಿ ಸಾಧನೆಗಳನ್ನು ಮಾಡಿದ್ದಾರೆ. ತತ್ವಜ್ಞಾನದ ಮೂಲಕ ಸರಿ ತಪ್ಪುಗಳು ಚಿಂತನೆ ಮೂಡಲಿದೆ. ಉಡುಪಿಯಲ್ಲಿ ಆರಂಭಿಸಿರುವ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಗ್ರಂಥಾಲಯದಲ್ಲಿ ತತ್ವಜ್ಞಾನ ಮತ್ತು ತಂತ್ರಜ್ಞಾನವನ್ನು ಒಟ್ಟಿಗೆ ಕಲಿಯುವ ಅವಕಾಶವಿದ್ದು, ಡಿಜಿಟಲ್ ಲೈಬ್ರರಿಯಲ್ಲಿನ ಸಾಫ್ಟ್ವೇರ್ ನಿರಂತರವಾಗಿ ಅಪ್‌ಡೇಟ್ ಆಗುತ್ತಿರುವಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿಗಳು ಹೇಳಿದರು.

ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಶ್ರೀಪಾದರು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ಉಡುಪಿ ಶಾಸಕ ರಘುಪತಿ ಭಟ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕ ಲಾಲಾಜಿ.ಆರ್.ಮೆಂಡನ್, ವಿಧಾನಪರಿಷತ್ ಶಾಸಕ ಮಂಜುನಾಥ ಭಂಡಾರಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್. ಹೊಸಮನಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಎಸ್ಪಿ ವಿಷ್ಣುವರ್ಧನ್, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ, ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ, ಬನ್ನಂಜೆ ಗೋವಿಂದಾಚಾರ್ಯರ ಪುತ್ರ ವಿನಯ ಭೂಷಣ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.