ಬೆಂಗಳೂರು: ಡಿ.ಜೆ.ಹಳ್ಳಿಯಲ್ಲಿ ಶಾಸಕನ ಮನೆ ಹಾಗೂ ಪೊಲೀಸ್ ಠಾಣೆಗೆ ದಾಳಿ ನಡೆಸಿದ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಅವರು,’ ಕಿಡಿಗೇಡಿಗಳು ಕೈ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ’ ಎಂದು ಹೇಳಿದ್ದಾರೆ.
‘ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕು’ ಎಂದು ಸಿಎಂ ಮನವಿ ಮಾಡಿದ್ದಾರೆ.












