ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯನ್ನು 1 ನೇ ಸ್ಥಾನಕ್ಕೇರಿಸಲು ಅಧಿಕಾರಿಗಳು ಶ್ರಮವಹಿಸಿ: ಸಿಎಂ ಸಿದ್ದರಾಮಯ್ಯ

ಉಡುಪಿ: ಜಿಲ್ಲೆಯ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದು ಆರೋಗ್ಯ ಇಲಾಖೆಯ ಆದ್ಯ ಕರ್ತವ್ಯಗಳಲ್ಲಿ ಒಂದಾಗಿದೆ. ಪ್ರಸ್ತುತ ಜಿಲ್ಲೆಯು ಆರೋಗ್ಯ ಸೇವೆ ಸೂಚ್ಯಂಕದಲ್ಲಿ 18ನೇ ಸ್ಥಾನದಲ್ಲಿದೆ. ಆದರೆ 2015 ನೇ ಸಾಲಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿತ್ತು. ಇದು ಅಧಿಕಾರಿಗಳ ಉದಾಸೀನತೆಯನ್ನು ತೋರುತ್ತದೆ. ಮತ್ತೊಮ್ಮೆ ಜಿಲ್ಲೆಯನ್ನು 1 ನೇ ಸ್ಥಾನಕ್ಕೆ ತರಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಶ್ರಮವಹಿಸಿ, ಕೆಲಸ ಮಾಡಬೇಕು. ಆರೋಗ್ಯ ಸಿಬ್ಬಂದಿಗಳು ಜನರಿಗೆ ಉತ್ತಮ ಸೇವೆಗಳನ್ನು ಒದಗಿಸದಿದ್ದಲ್ಲಿ ಮರಣ ಹೊಂದುವವರ ಸಂಖ್ಯೆ ಹೆಚ್ಚುತ್ತದೆ. ಜಿಲ್ಲೆಯಲ್ಲಿ ಇತ್ತೀಚೆಗೆ ತಾಯಿ ಮಕ್ಕಳ ಮರಣ ಸಂಖ್ಯೆಯೂ ಸಹ ಹೆಚ್ಚಾಗಿದೆ. ಇದೇ ರೀತಿ ಮುಂದುವರೆದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನೇ ನೇರ ಹೊಣೆಯಾಗಿಸಿ ಶಿಸ್ತು ಕ್ರಮ ಅಥವಾ ಸೇವೆಯಿಂದ ವಜಾಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮಂಗಳವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಗತಿ
ಪರಿಶೀಲನಾ ಸಭೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶೈಕ್ಷಣಿಕ ಸೂಚ್ಯಂಕದಲ್ಲಿ 2017 ರಿಂದ 2019 ರ ವರೆಗೆ ಮೊದಲ ಹಾಗೂ ಎರಡನೇ ಸ್ಥಾನದಲ್ಲಿದ್ದ ಜಿಲ್ಲೆಯು ಈಗ 13 ನೇ ಸ್ಥಾನಕ್ಕೆ ಕುಸಿತಗೊಂಡಿದೆ. ಮುಂದಿನ ಅವಧಿಯೊಳಗೆ ಜಿಲ್ಲೆಯ ಸೂಚ್ಯಂಕದಲ್ಲಿ ಪ್ರಗತಿ ಕಾಣದೇ ಇದ್ದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು. 10 ಕ್ಕಿಂತ ಕಡಿಮೆ ಮಕ್ಕಳ ಸಂಖ್ಯೆ ಹೊಂದಿರುವ ಶಾಲೆಯನ್ನು ಸಮೀಪದ ಶಾಲೆಗಳ ಜೊತೆ ಒಂದುಗೂಡಿಸಿ, ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದರೊಂದಿಗೆ ರಾಜ್ಯಕ್ಕೆ ಮಾದರಿಯಾಗಿಸಬೇಕು ಎಂದರು.

ಜನ ಸಾಮಾನ್ಯರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದಾಗ ಮಾತ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯ. ಸರಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವುದರ ಬಗ್ಗೆ ಅಧಿಕಾರಿಗಳು ಮುತುವರ್ಜಿ ವಹಿಸುವುದರೊಂದಿಗೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರ ತೆರಿಗೆ ಹಣದಿಂದ ಸರಕಾರವನ್ನು ನಡೆಸಲಾಗುತ್ತದೆ. ಅವರ ಆಶಯಕ್ಕೆ ತಕ್ಕಂತೆ ಸೇವೆಗಳನ್ನು
ಒದಗಿಸುವುದು ಜನ ಪ್ರತಿನಿಧಿಗಳಾದ ನಾವು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯ. ಅದರಲ್ಲೂ ಜನರಲ್ಲಿ ನೇರ ಸಂಪರ್ಕವನ್ನು ಹೊಂದಿ ಸರಕಾರ ಮತ್ತು ಜನರ ಮಧ್ಯೆ ಸೇತುವೆಯಾಗಿ ಸರಕಾರಿ ನೌಕರರು ಕಾರ್ಯನಿರ್ವಹಿಸಬೇಕು. ಇದನ್ನು ಮರೆತರೆ ಜನ ವಿರೋಧಿಸುತ್ತಾರೆ ಎಂದರು.

ಅಧಿಕಾರಿಗಳು ನಾವು ಉನ್ನತ ಮಟ್ಟದ ಅಧಿಕಾರಿಗಳು ಎಂಬ ಭ್ರಮೆಯನ್ನು ಬಿಟ್ಟು ಹಾಗೂ ಜನಪ್ರತಿನಿಧಿಗಳು ಕೂಡಾ ತಮ್ಮ ಅಧಿಕಾರದ ಅಹಂ ಅನ್ನು ಬಿಟ್ಟು ಜನರನ್ನು ಗೌರವದಿಂದ ಕಾಣಬೇಕು. ಜನರು ಸಮಸ್ಯೆಗಳನ್ನು ತಂದು ಕಚೇರಿಗೆ ಬಂದಾಗ ಅವರುಗಳಿಗೆ ಅಲೆದಾಡಿಸದೇ ಸರಕಾರದ ನಿಯಮಾನುಸಾರ ಕೆಲಸವನ್ನು ಮಾಡಿಕೊಡಬೇಕೆಂದರು.

ನೆರೆಯಿಂದಾಗಿ ಪೂರ್ಣ ಪ್ರಮಾಣದಲ್ಲಿ ಮನೆಯನ್ನು ಕಳೆದುಕೊಂಡವರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣಕ್ಕೆ ಅನುದಾನ ಒದಗಿಸುವುದರ ಜೊತೆಗೆ ಅವರ ಮನೆ ಪೂರ್ಣಗೊಳ್ಳುವವರೆಗೆ ಅಧಿಕಾರಿಗಳೇ ಮೇಲುಸ್ತುವಾರಿಯನ್ನು ವಹಿಸಬೇಕು. ಮಳೆ ನೀರಿನಿಂದ ಹಾನಿಗೊಳಗಾದಾಗ ಬೆಳೆಹಾನಿಯನ್ನು ಶೀಘ್ರದಲ್ಲಿಯೇ ಸರ್ವೇ ಮಾಡಿಸಿ, ಪರಿಹಾರ ನೀಡುವುದರ ಜೊತೆಗೆ ಎರಡನೇ ಬಾರಿ ಬಿತ್ತನೆಗೆ ಭತ್ತದ ಬೀಜದ ವ್ಯವಸ್ಥೆಯನ್ನು ಸಹ ಮಾಡಬೇಕು. ಜಿಲ್ಲೆಯಲ್ಲಿ ಈ ಬಾರಿಯ ಮಳೆಯಿಂದ 6296.25 ಲಕ್ಷ ರೂ. ದಷ್ಟು ಮೂಲ ಸೌಕರ್ಯಗಳನ್ನು ಕಲ್ಪಿಸುವ ರಸ್ತೆ, ವಿದ್ಯುತ್, ಸಂಪರ್ಕ ಸಾಧನಗಳು, ಸರಕಾರಿ ಕಟ್ಟಡಗಳು ಹಾನಿಯಾಗಿವೆ. ಇವುಗಳನ್ನು ಸರ್ವೇ ಮಾಡಿಸಿ ಸರಕಾರಕ್ಕೆ ಕೂಡಲೇ ವರದಿ ಮಾಡಿ, ಪುನರ್ ನಿರ್ಮಾಣ ಮಾಡಲು ಮುಂದಾಗಬೇಕು ಎಂದರು.

ಮಳೆಗಾಲದಲ್ಲಿ ಅಪಾಯಕಾರಿಯಾಗುವ ಕಾಲುಸಂಕಗಳ ಮೇಲೆ ಸಂಚರಿಸುವುದು ಅಪಘಾತಗಳಿಗೆ ಅನುವು
ಮಾಡಿಕೊಟ್ಟ ಹಾಗೆ . ಈ ಕೂಡಲೇ ಆರ್.ಡಿ.ಪಿ.ಆರ್ ಹಾಗೂ ಪಿಡ್ಬ್ಲ್ಯೂಡಿ ಇಲಾಖೆ ಅಂತಹ ಕಾಲು ಸಂಕಗಳ ಸರ್ವೆ ಮಾಡಿಸಿ 2 ವರ್ಷದೊಳಗೆ ನರೇಗಾ ಹಾಗೂ ಇತರೇ ಅನುದಾನದೊಂದಿಗೆ ಶಾಶ್ವತ ಕಾಮಗಾರಿ ಕೈಗೊಳ್ಳಬೇಕು ಎಂದರು.

ರೈತರಿಗೆ ಗೊಬ್ಬರ, ಬಿತ್ತನೆ ಬೀಜ ಔಷಧಿಗಳ ವಿತರಣೆಯಲ್ಲಿ ಯವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಹೆಚ್ಚಿನ ಮಳೆಯಿಂದಾಗಿ ಜಿಲ್ಲೆಯಲ್ಲಿ ಅಡಿಕೆಗೆ ಚುಕ್ಕೆ ರೋಗ ಕಂಡು ಬಂದಿದೆ. ಇದಕ್ಕೆ ಕಾರಣ ಮತ್ತು ಶಾಶ್ವತ ನಿರ್ಮೂಲನೆಗೆ ಅನುಸರಿಸಬೇಕಾದ ಕ್ರಮದ ಬಗ್ಗೆ ವಿಜ್ಞಾನಿಗಳ ಸ್ಥಳ ಭೇಟಿಗಳೊಂದಿಗೆ ವರದಿಯನ್ನು ಸರಕಾರಕ್ಕೆ ನೀಡಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ 2808 ರಸ್ತೆ ಅಪಘಾತವಾಗಿ, 543 ಜನ ಮರಣ ಹೊಂದಿರುತ್ತಾರೆ. ಇದಕ್ಕೆಲ್ಲ ಏನು ಕಾರಣ ಎಂದು ಪ್ರಶ್ನಿಸಿದ ಅವರು, ಲೊಕೋಪಯೋಗಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಈ ಬಗ್ಗೆ ಎಚ್ಚರವಹಿಸಬೇಕು.

ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಸೈಬರ್ ಕ್ರೈಮ್ ಪ್ರಕರಣಗಳು ಕಂಡು ಬರುತ್ತಿವೆ. ಇದರಿಂದ ಕಾನೂನು ಸುವ್ಯವಸ್ಥೆ ಸರಿಯಿಲ್ಲದಂತಾಗಿದೆ. ಪೊಲೀಸ್ ಇಲಾಖೆಯು ದಿನದ 24 ಗಂಟೆಯೂ ಕೆಲಸ ನಿರ್ವಹಿಸಿ, ಈ ರೀತಿ ಆಗುವುದು ಸರಿಯಲ್ಲ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳು ಆಗಿಂದಾಗ್ಗೆ ಎಲ್ಲಾ ಇಲಾಖೆಗಳ ಪ್ರಗತಿ
ಪರಿಶೀಲನೆಗಳನ್ನು ಕೈಗೊಳ್ಳುವ ಜೊತೆಗೆ ಹಾಸ್ಟೆಲ್, ಆಸ್ಪತ್ರೆ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಉಡುಪಿ, ಮಂಗಳೂರು ಜಿಲ್ಲೆಗಳು ಅಕ್ಷರಸ್ಥ ಜಿಲ್ಲೆಯಾಗಿದ್ದು, ರಾಜ್ಯಕ್ಕೆ ಮಾದರಿಯಾಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಅದು ಕಂಡುಬರುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ತ್ರೈಮಾಸಿಕ ಜಿಲ್ಲಾ ಪ್ರಗತಿ ಪರಿಶೀಲನೆ ತೆಗೆದುಕೊಳ್ಳವ ಜೊತೆಗೆ ಆಯ್ದ ಇಲಾಖೆಗಳ ಪರಿಶೀಲನೆಯನ್ನು ತಿಂಗಳಿಗೊಮ್ಮೆ ಕೈಗೊಳ್ಳಬೇಕು. ಸಾರ್ವಜನಿಕ ಕುಂದು ಕೊರತೆಗಳು ಪತ್ರಿಕೆಗಳಲ್ಲಿ ಪ್ರಕಟವಾದಾಗ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್, ಬಂದರು ಮತ್ತು ಮೀನುಗಾರಿಕಾ ಸಚಿವ ಮಾಂಕಾಳು ವೈದ್ಯ, ಶಾಸಕ ವಿ.ಸುನೀಲ್ ಕುಮಾರ್, ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಕಿರಣ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಒಳಾಡಳಿತ ಇಲಾಖೆಯ ಅಪರ ಮುಖ್ಯ
ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.