ಏ. 27 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಡುಪಿಗೆ : ಪಕ್ಷ ಪ್ರಚಾರದಲ್ಲಿ ಭಾಗಿ

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 27 ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಶುಕ್ರವಾರ ತಿಳಿಸಿದರು.

ಕಾಂಗ್ರೆಸ್ ಭವನದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಏಪ್ರಿಲ್ 27ರಂದು ಜಿಲ್ಲೆಯ ಉಚ್ಚಿಲದಲ್ಲಿ ಮೀನುಗಾರ ಸಮುದಾಯವನ್ನು ಉದ್ದೇಶಿಸಿ ಅವರ ಸಮಸ್ಯೆಗಳು ಮತ್ತು ನೋವುಗಳನ್ನು ಅರಿಯಲಿದ್ದಾರೆ. ಕರ್ನಾಟಕ ಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಏಪ್ರಿಲ್ 23 ಮತ್ತು 24 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ಡಿ.ಕೆ ಶಿವಕುಮಾರ್ ಏಪ್ರಿಲ್ 23 ರಂದು ಬೈಂದೂರಿನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ ಬಳಿಕ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 24 ರಂದು ಬೃಹತ್ ರೋಡ್ ಶೋ ಕೂಡ ನಿಗದಿಯಾಗಿದ್ದು, ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಅಜ್ಜರಕಾಡಿನವರೆಗೆ ಸಂಚರಿಸಿ ಅಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಗಳಲ್ಲಿ 10,000 ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಕೊಡವೂರು, ಉಡುಪಿ ಜಿಲ್ಲೆಯ ಐವರು ಅಭ್ಯರ್ಥಿಗಳ ಪರ ಮುಂದಿನ ದಿನಗಳಲ್ಲಿ ಬಿರುಸಿನ ಪ್ರಚಾರ ನಡೆಸಲಾಗುವುದು. ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ ಎಂದರು.

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಫ಼ೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ಭಾಸ್ಕರ್ ರಾವ್ ಕಿದಿಯೂರು, ರಮೇಶ್ ಕಾಂಚನ್, ದಿನಕರ ಹೇರೂರು, ಬಿ.ನರಸಿಂಹ ಮೂರ್ತಿ, ಪ್ರಖ್ಯಾತ್ ಶೆಟ್ಟಿ, ಕುಶಲ ಶೆಟ್ಟಿ, ಹರೀಶ್ ಶೆಟ್ಟಿ ಪಾಂಗಾಳ, ಅಮೃತ್ ಶೆಣೈ, ಮಹಾಬಲ ಕುಂದರ್, ಹರೀಶ್ ಕಿಣಿ ಉಪಸ್ಥಿತರಿದ್ದರು.