ಬಾಲ್ಯ ವಿವಾಹ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಮಾ.6: ಬಾಲ್ಯ ವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಪಿಡುಗನ್ನು ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಪ್ರತಿಯೊಬ್ಬರೂ ತಮ್ಮ ಸಂಪೂರ್ಣ ಸಹಕಾರವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಜಿಲ್ಲೆ ಮತ್ತು ಬಾಲ್ಯ ವಿವಾಹ ನಿಷೇಧ ಭಾಗೀದಾರ ಇಲಾಖೆಗಳ ಸಹಯೋಗದೊಂದಿಗೆ, ಬಾಲ್ಯ ವಿವಾಹ ನಿಷೇಧ ಆಭಿಯಾನ “Video on Wheels” ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಬಾಲ್ಯ ವಿವಾಹದಿಂದ ಹೆಣ್ಣು ಮಕ್ಕಳ ಇಡೀ ಜೀವನವೇ ನಲುಗಲಿದ್ದು, ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ, ಅಲ್ಲದೇ ಶಿಕ್ಷಣದಿಂದಲೂ ವಂಚಿತರಾಗಲಿದ್ದು ತಮ್ಮ ಬದುಕುವ ಹಕ್ಕು ,ಅಭಿವೃದ್ಧಿ ಹೊಂದುವ ಹಕ್ಕು, ರಕ್ಷಣೆಯ ಹಕ್ಕು ಗಳನ್ನು ಕಳೆದುಕೊಳ್ಳಲಿದ್ದಾರೆ, ಇಂತಹ ಸಾಮಾಜಿಕ ಪಿಡುಗಿನಿಂದ ಮಕ್ಕಳನ್ನು ರಕ್ಷಿಸಲು ಸರ್ಕಾರದ ಜೊತೆಗೆ ಪ್ರತಿಯೊಬ್ಬರೂ ಕೈಜೋಡಿಸುವ ಅಗತ್ಯವಿದೆ ಎಂದರು.

ಬಾಲ್ಯ ವಿವಾಹದ ದುಷ್ಪರಿಣಾಮಗಳ ಕುರಿತಂತೆ ಮಕ್ಕಳಿಗೆ ಶಾಲೆಗಳಲ್ಲಿ ಶಿಕ್ಷಕರು ಅರಿವು ಮೂಡಿಸಬೇಕು, ಪೋಷಕರೂ ಸಹ ಇದರ ದುಷ್ಪರಿಣಾಮಗಳ ಕುರಿತು ಜಾಗೃತರಾಗಬೇಕು, ಬಾಲ್ಯ ವಿವಾಹ ಪ್ರಕರಣ ಕಂಡು ಬಂದಲ್ಲಿ ತಕ್ಷಣ ಉಚಿತ ಟೋಲ್ ಪ್ರೀ ಸಂಖ್ಯೆ 1098 ಗೆ ಕರೆ ಮಾಡಿ ಮಾಹಿತಿ ನೀಡುವುದರಿಂದ ಮಕ್ಕಳನ್ನು ಇದರಿಂದ ರಕ್ಷಿಸಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಹೆಚ್ಚು ನೆಲಸಿರುವ ಪ್ರದೇಶಗಳಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆಯಲ್ಲಿನ ಅಂಶಗಳು, ಶಿಕ್ಷೆಯ ಪ್ರಮಾಣ ಕುರಿತಂತೆ ಸಾರ್ವಜನಿಕವಾಗಿ ಹೆಚ್ಚಿನ ಅರಿವು ಮೂಡಿಸಬೇಕು, ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಇತರೇ ಜಿಲ್ಲೆಗಳಿಗೆ ಹೋಲಿಸಿದ್ದಲ್ಲಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಅತ್ಯಂತ ಕಡಿಮೆ ಇದೆ ಆದರೆ ಜಿಲ್ಲೆಯ ವಲಸೆ ಕಾರ್ಮಿಕರಲ್ಲಿ ಈ ಪದ್ದತಿ ಇರುವ ಸಾಧ್ಯತೆಗಳಿದ್ದ ಈ ಬಗ್ಗೆ ಪೋಷಕರಿಗೆ ಸೂಕ್ತ ಅರಿವು ಮೂಡಿಸಬೇಕು, ವಲಸೆ ಕಾರ್ಮಿಕರಿಗೆ ಆಮಿಷ ನೀಡಿ ಅವರ ಮಕ್ಕಳನ್ನು ಬಾಲ್ಯ ವಿವಾಹ ಮಾಡಿಕೊಳ್ಳುವ ಸಂಭವಗಳಿದ್ದು , ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡುವುದರ ಮೂಲಕ ಮತ್ತು ಪೋಷಕರಿಗೆ ಜಾಗೃತಿ ಮೂಡಿಸುವ ಮೂಲಕ ಇದನ್ನು ತಡೆಯಲು ಸಾಧ್ಯವಿದ್ದು, ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಮತ್ತು ಗ್ರಾಮ ಪಂಚಾಯತ್ ಗಳ ಕಸ ವಿಲೇವಾರಿ ವಾಹನಗಳಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮಗಳು ಮತ್ತು ಕಾಯಿದೆಯ ಬಗ್ಗೆ ಜಾಗೃತಿ ಸಂದೇಶ ಪ್ರಚಾರ ಮೂಡುವ ಮೂಲಕ, ಈ ಪಿಡುಗಿನ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಬಾಲ್ಯ ವಿವಾಹ ನಿಷೇಧ ಕುರಿತು ಪ್ರಮಾಣ ವಚನ ಭೋಧಿಸಿದರು. ಸಹಿ ಸಂಗ್ರಹಣಾ ಅಭಿಯಾನ ನಡೆಯಿತು.

ಜಿಲ್ಲಾ ನೆಹರು ಯುವ ಕೇಂದ್ರದ ಯೋಜನಾ ಸಮನ್ವಯಾಧಿಕಾರಿ ವಿಲ್ಪ್ರಡ್ ಡಿಸೋಜಾ  ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಸ್ವಾಗತಿಸಿದರು. ಶಿಶು ಆಭಿವೃಧ್ದಿ ಯೋಜನಾಧಿಕಾರಿ ವೀಣಾ ವಿವೇಕಾನಂದ ವಂದಿಸಿದರು.