ಉಡುಪಿ: ಕೋವಿಡ್ ಸರಳ ಮಾರ್ಗಸೂಚಿಗಳಾದ ಮುಖಗವಸು ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡುವುದು, ಕೈತೊಳೆಯುವುದು ಸೇರಿದಂತೆ ಶುಚಿತ್ವ ಕಾಪಾಡಿದಾಗ ಮಾತ್ರ ಕೊರೊನಾದಿಂದ ದೂರ ಉಳಿಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಇಂದು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಕೋವಿಡ್-19 ರೋಗ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಂಬಂಧಿಸಿ ಕೋವಿಡ್-19 ತೀವ್ರ ಪ್ರಚಾರಾಂದೋಲನ ಕಾರ್ಯಕ್ರಮ ಅನುಷ್ಟಾನದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯಾವುದೇ ರೋಗ ಬಂದು ಅದಕ್ಕೆ ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಒಳಿತು. ಕೊರೊನಾ ರೋಗದಿಂದ ದೂರ ಉಳಿಯಲು ಸಾರ್ವಜನಿಕರು ಸುಲಭ ಮಾರ್ಗೋಪಾಯಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಆಗಾಗ ಕೈ ತೊಳೆಯುವುದು ಸೇರಿದಂತೆ ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಿ ಚಾಚು ತಪ್ಪದೇ ಪಾಲಿಸಬೇಕು ಎಂದರು.
ಸರಕಾರಿ ನೌಕರರು ಕೋವಿಡ್ ಪ್ರತಿಜ್ಞೆ ಸ್ವೀಕರಿಸಿ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವುದರೊಂದಿಗೆ ಜನಸಾಮಾನ್ಯರಿಗೆ ಮಾದರಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಮೇಲೆ ತಿಳಿಸಿದ ಮಾರ್ಗಸೂಚಿಯನ್ನು ಪಾಲಿಸುವ ರೀತಿಯಲ್ಲಿ ಕೋವಿಡ್-19 ಜನಜಾಗೃತಿ ಅಂದೋಲನವನ್ನು ನಡೆಸಬೇಕು ಎಂದರು.
ಮಲ್ಪೆ ಹಾಗೂ ಗಂಗೊಳ್ಳಿಯ ಬಂದರಿನ ಮೀನು ಮಾರುಕಟ್ಟೆ, ಎ.ಪಿ.ಎಂ.ಸಿ ಮಾರುಕಟ್ಟೆಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸುವ ಕೆಲಸವಾಗಬೇಕಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.












