ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೊರೊನಾ ಹಣ ಮಾಡುವ ದಂಧೆಯಾಗಿದೆ: ಮಿಥುನ್ ರೈ ಆರೋಪ

ಉಡುಪಿ: ಕೊರೊನಾ ಜನಸಾಮಾನ್ಯರಿಗೆ ಸಂಕಷ್ಟವನ್ನು ತಂದೊಡ್ಡಿದ್ದಾರೆ. ಬಿಜೆಪಿಗೆ ಇದು ಹಣ ಮಾಡುವ ದಂಧೆಯಾಗಿದೆ ಎಂದು ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆರೋಪಿಸಿದರು.

ಇಂದು ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಕೊರೊನಾ ಪರಿಕರಣಗಳ ಖರೀದಿಯಲ್ಲಿ ದೊಡ್ಡಮಟ್ಟದ ಹಗರಣ ನಡೆಸಿದೆ. ದುಪ್ಪಟ್ಟು ಹಣಕೊಟ್ಟು ಪರಿಕರಣಗಳನ್ನು ಖರೀದಿ ಮಾಡಿದೆ ಎಂದು ದೂರಿದರು.

ಸರ್ಕಾರವು ಕಾರ್ಮಿಕರಿಗೆ ಊರಿಗೆ ತೆರಳಲು ವ್ಯವಸ್ಥೆ ಮಾಡದೆ ಅನ್ಯಾಯ ಎಸಗಿದೆ. ಕಾಂಗ್ರೆಸ್ ವೋಟ್ ಕೇಳಲು ಪಕ್ಷ ಮಾತ್ರವಲ್ಲ, ಜನರ ಹಿತರಕ್ಷಣೆ ಮಾಡುವ ಪಕ್ಷ ಕೂಡ ಆಗಿದೆ. ಸೋಲು ಜೀವನದ ಅಂತ್ಯವಲ್ಲ, ಅದು ಯಶಸ್ಸಿನ ಆರಂಭ. ಮುಂಬರುವ ದಿನಗಳಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಕ್ತವಾಗಲಿದೆ ಎಂದು ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಉಡುಪಿ ಶಾಸಕ ರಘುಪತಿ ಭಟ್ ಆಪ್ತರು ಮರಳು ದಂಧೆಯಲ್ಲಿ ತೊಡಗಿದ್ದಾರೆ. ಇನ್ನೊಂದು ಕಡೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸಿಮೆಂಟ್ ದಂಧೆ ತೊಡಗಿದ್ದಾರೆ. ನಿಮಗೆ ಸಿಮೆಂಟ್ ಬೇಕಿದ್ದರೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ತಂದುಕೊಡುತ್ತಾರೆ. ಸರ್ಕಾರದ ಖಜಾನೆ ಲೂಟಿ ಮಾಡುವ ಕೆಲಸ ಮಾಡಬೇಡಿ ಎಂದು ವಾಗ್ದಾಳಿ ನಡೆಸಿದರು.

ಭಾರತೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾ ಬಾಲಕೃಷ್ಣ ಮಾತನಾಡಿ, ಕೇಂದ್ರ ಸರ್ಕಾರ ಕೊಟ್ಟ ಆಶ್ವಾಸನೆಗಳನ್ನು ಯಾವುದನ್ನು ಈಡೇರಿಸಿಲ್ಲ. ಇಡಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷಗಳ ಮೇಲೆ ದಾಳಿ ಮಾಡುವ ಕೆಲಸ ಮಾಡುತ್ತಿದೆ. ಕೊರೊನಾ ಸಂಕಷ್ಟದ ಮಧ್ಯೆ ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರ ಬದುಕು ದುಸ್ತರವಾಗಿದೆ. ರಾಜ್ಯ ಸರ್ಕಾರ ಜನರವ ರಕ್ಷಣೆ ಮಾಡುವ ಬದಲು ಕೊರೊನಾ ಭ್ರಷ್ಟಚಾರದಲ್ಲಿ ತೊಡಗಿದೆ ಎಂದು ದೂರಿದರು.

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪರಾಜ್ ಗೌಡ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಯುವ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ. ಅಮೀನ್, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್ , ವಿಜಯ ಪೂಜಾರಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ರಂಜಿತ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಅಬ್ದುಲ್ ಅಜೀಜ್ ಮೊದಲಾದವರು ಉಪಸ್ಥಿತರಿದ್ದರು.