ಮತದಾರರ ಪಟ್ಟಿ ಪರಿಷ್ಕರಣೆ ಅರ್ಜಿಗಳ ಪರಿಶೀಲನೆ ಸಂಪೂರ್ಣ ಪಾರದರ್ಶಕ: ಜಿಲ್ಲಾಧಿಕಾರಿ ಕೂರ್ಮಾರಾವ್ 

ಉಡುಪಿ: ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಕುರಿತಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಆನ್‌ಲೈನ್ ಹೊರತುಪಡಿಸಿ ನೇರವಾಗಿ ಅರ್ಜಿ ನೀಡಿರುವವರಿಗೆ ಅರ್ಜಿ ಪಡೆದ ಬಗ್ಗೆ ಸ್ವೀಕೃತಿ ನೀಡಿ ಪಾರದರ್ಶಕತೆ ಕಾಯ್ದುಕೊಂಡು, ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಮತ್ತು ಹೊಸ ಮತದಾರರಿಗೆ ಶೀಘ್ರದಲ್ಲಿ ಎಪಿಕ್ ಕಾರ್ಡ್ ದೊರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ನವೆಂಬರ್ 9 ರಿಂದ ಡಿಸೆಂಬರ್ 8 ರವರೆಗೆ ನಡೆದಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಿರುವ ಎಲ್ಲಾ ಅರ್ಜಿಗಳ ಪರಿಶೀಲನೆಯಲ್ಲಿ ಯಾವುದೇ ಅರ್ಜಿಗಳು ತಪ್ಪಿ ಹೋಗದಂತೆ ಅತ್ಯಂತ ವ್ಯವಸ್ಥಿತ ಮತ್ತು ಕ್ರಮಬದ್ಧವಾಗಿ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಎಲ್ಲಾ ತಹಸೀಲ್ದಾರ್‌ಗಳಿಗೆ ತಾಕೀತು ಮಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿನ, ಮತದಾರರ ಪಟ್ಟಿಯಲ್ಲಿನ ಸೇರ್ಪಡೆ, ಆಕ್ಷೇಪಣೆ ಮತ್ತು ತಿದ್ದುಪಡಿಗಳ ಕುರಿತಂತೆ ಸಂಪೂರ್ಣ ವಿವರಗಳನ್ನು ವಿಧಾನಸಭಾ ಕ್ಷೇತ್ರವಾರು ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಪ್ರಸ್ತುತ ನಡೆದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ, 16804 ಹೊಸ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದು, ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು 5783 ಹಾಗೂ ಮತದಾರರ ಪಟ್ಟಿಯಲ್ಲಿ ಅಗತ್ಯ ಬದಲಾವಣೆಗಳಿಗಾಗಿ 13320 ಅರ್ಜಿಗಳು ಸೇರಿದಂತೆ ಒಟ್ಟು 35907 ಅರ್ಜಿಗಳು ಸಲ್ಲಿಕೆಯಾಗಿವೆ ಎಂದರು.

ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಲು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 3348, ಕುಂದಾಪುರ 2984, ಉಡುಪಿ 3893, ಕಾಪು 2852 ಹಾಗೂ ಕಾರ್ಕಳ 3726 ಸೇರಿದಂತೆ ಒಟ್ಟು 16804 ಅರ್ಜಿ ಸಲ್ಲಿಕೆಯಾಗಿವೆ. ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 789, ಕುಂದಾಪುರ 1285, ಉಡುಪಿ 1270, ಕಾಪು 916, ಕಾರ್ಕಳ 1523 ಸೇರಿದಂತೆ ಒಟ್ಟು 5783 ಅರ್ಜಿ ಸಲ್ಲಿಕೆಯಾಗಿವೆ. ಮತದಾರರ ಪಟ್ಟಿಯಲ್ಲಿ ಅಗತ್ಯ ಬದಲಾವಣೆಗಳಿಗಾಗಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 2274, ಕುಂದಾಪುರ 2287, ಉಡುಪಿ 2466, ಕಾಪು 2411, ಕಾರ್ಕಳ 3882 ಸೇರಿದಂತೆ ಒಟ್ಟು 13320 ಅರ್ಜಿ ಸಲ್ಲಿಕೆಯಾಗಿವೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಭವಿಷ್ಯ ನಿಧಿ ಇಲಾಖೆಯ ಆಯುಕ್ತ ಅಭಿಷೇಕ್ ಮತ್ತು ವಿವಿಧ ಅನುಷ್ಠಾನಾಧಿಕಾರಿಗಳು ಇದ್ದರು. ವೀಡಿಯೋ ಸಂವಾದದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು ಭಾಗವಹಿಸಿದ್ದರು.