ಪ್ರಾಣಿಗಳ ಅನಧಿಕೃತ ವಧೆ ಮೇಲೆ ಕಣ್ಗಾವಲಿಡಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ
ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಅವರು ಶನಿವಾರ ವರ್ಚುವಲ್ ಮೂಲಕ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಾಣಿಗಳ ಅನಧಿಕೃತ ವಧೆ ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ ಅವರು ಜಿಲ್ಲೆಯಾದ್ಯಂತ ನಿಯೋಜಿಸಲಾದ ಚೆಕ್‌ಪೋಸ್ಟ್ಗಳಲ್ಲಿ, ಅನಧಿಕೃತವಾಗಿ ಜಾನುವಾರುಗಳು ಸಾಗಾಣಿಕೆ ಆಗದಂತೆ ನಿಗಾ ವಹಿಸಬೇಕು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಬೇಕು ಎಂದರು.

ಅನಧಿಕೃತವಾಗಿ ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಲಾದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಈ ತರಹದ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ ಹಾಕೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್, ನಗರಸಭೆ ಪೌರಾಯುಕ್ತ ರಮೇಶ್ ನಾಯಕ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ, ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.