ಕಾಪು ಕಾರು ಅಪಘಾತ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು

ಉಡುಪಿ: ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಸೆ.11ರಂದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ಕು ಮಂದಿ ಯುವಕರು ಗಾಯಗೊಂಡಿದ್ದರು.

ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ (30) ಎಂಬ ಯುವಕ ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆತನ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.
ಮೃತ ಯುವಕನ ಹೆಚ್ಚಿನ ವಿವರ ಲಭ್ಯವಾಗಿಲ್ಲ. ಈತ ಉಡುಪಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ.

ವ್ಯಕ್ತಿಯ ವಾರಸುದಾರರು, ಸಂಬಂಧಿಕರು ಕಾಪು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕಾಪು ಪೊಲೀಸರು ವಿನಂತಿಸಿದ್ದಾರೆ.

ಕಾಪು ಠಾಣೆಯ ದೂರವಾಣಿ ಸಂಖ್ಯೆ 0820 2551033, ಪಿಎಸ್ಐ ಕಾಪು ಮೊಬೈಲ್ ಸಂಖ್ಯೆ 94808 05449 ಅಥವಾ ಉಡುಪಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 0820 2526444 ಸಂಪರ್ಕಿಸಬಹುದಾಗಿದೆ.