ಜಿಲ್ಲಾಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ಕೊಡದೆ ಎಂದಿನಂತೆ ತರಗತಿ ನಡೆಸಿದ ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ಆಂಗ್ಲ ಮಾಧ್ಯಮ ಶಾಲೆ

ಕಾರ್ಕಳ: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ, ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂದಿನಂತೆ ತರಗತಿ ನಡೆದಿದೆ.

ಮಳೆಯ ವಿಕೋಪಕ್ಕೆ ಮಕ್ಕಳು ಗುರಿಯಾಗದಿರಲೆಂದು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಸಾರುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದರೂ, ಇಲ್ಲಿನ ಆಡಳಿತ ಮಂಡಳಿ ಆದೇಶಕ್ಕೆ ಕಿಮ್ಮತ್ತು ನೀಡದೆ ತರಗತಿ ನಡೆಸಿದೆ. ಶಾಲೆಯು ತಮ್ಮ ಶಾಲಾ ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆತಂದು ಎಂದಿನಂತೆ ತರಗತಿಯನ್ನು ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಧಾರಾಕಾರ ಮಳೆ ಸುರಿಯುತ್ತಿದ್ದರೂ, ಶಿಕ್ಷಣ ಸಂಸ್ಥೆ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.