ದ.ಕ. ಜಿಲ್ಲೆಯಲ್ಲಿ ಕೊರೊನ ಸೋಂಕಿತ 9 ಮಂದಿ ಗುಣಮುಖರಾಗಿ ಡಿಸ್ಚಾರ್ಜ್; ಇಂದು ಪುತ್ತೂರಿನ‌ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ‌ ಕೊರೊನಾ ಸೋಂಕಿತ ಮತ್ತೋರ್ವ ವ್ಯಕ್ತಿ ಪೂರ್ಣ ಗುಣಮುಖರಾಗಿ ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆ ಮೂಲಕ ದ.ಕ. ಜಿಲ್ಲೆಯಲ್ಲಿ‌ ಒಟ್ಟು 12 ಕೊರೊನಾ ಸೋಂಕಿತರ‌ ಪೈಕಿ 9 ಮಂದಿ ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಡಿಸ್ಚಾರ್ಜ್ ಆದವರು ಪುತ್ತೂರು ಮೂಲದವರಾಗಿದ್ದು, ಅವರು ದುಬೈಯಿಂದ ಮಾರ್ಚ್ 21 ರಂದು ಪುತ್ತೂರಿಗೆ ಆಗಮಿಸಿದ್ದರು. ಅನಂತರ ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಏಪ್ರಿಲ್ 1ರಂದು ಗಂಟಲಿನ ದ್ರವ ಮಾದರಿ ಪರೀಕ್ಷೆಯಲ್ಲಿ ಕೊರೊನಾ‌ ಸೋಂಕು ದೃಡಪಟ್ಟಿತ್ತು. ಹೀಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಏಪ್ರಿಲ್ 12 ಹಾಗೂ 13ರಂದು ಗಂಟಲಿನ ದ್ರವ ಮಾದರಿ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ಬಂದಿದ್ದು, ಹೀಗಾಗಿ ಇಂದು ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕಳೆದ 10 ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ.