ಎನ್ಒಸಿ ಇಲ್ಲದೆ ಗ್ರಾಮೀಣ ಭಾಗದ 3 ಲಕ್ಷ ಮನೆಗಳಿಗೆ ವಿದ್ಯುತ್: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಬಡವರ ಮನೆಗಳಿಗೆ ‘ಬೆಳಕು’ ಯೋಜನೆಯಡಿ ನಿರಕ್ಷೇಪಣ (ಎನ್‌ಒಸಿ) ಪತ್ರ ಇಲ್ಲದೆ, ಪಡಿತರ ಚೀಟಿಯ ಆಧಾರದ ಮೇಲೆ ವಿದ್ಯುತ್‌ ಸಂಪರ್ಕವನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್‌ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಮೂರು ಲಕ್ಷ ಮನೆಗಳು ವಿದ್ಯುತ್ ಸಂಪರ್ಕದಿಂದ ವಂಚಿತವಾಗಿದ್ದು, ಅವುಗಳಿಗೆ ಮುಂದಿನ 100 ದಿನಗಳೊಳಗೆ ವಿದ್ಯುತ್‌ ಸಂಪರ್ಕ ನೀಡಲಾಗುವುದು. ಬಿಪಿಎಲ್‌ ಅಥವಾ ಎಪಿಎಲ್‌ ಪಡಿತರ ಚೀಟಿ ಇದ್ದರೂ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ ಎಂದರು.

ಟ್ರಾನ್ಸ್‌ಫಾರ್ಮರ್‌ ಬ್ಯಾಂಕ್‌ ಸ್ಥಾಪನೆ:
ಕೆಟ್ಟು ಹೋಗಿರುವ ಸ್ಥಿತಿಯಲ್ಲಿರುವ ಟ್ರಾನ್ಸ್‌ಫಾರ್ಮರ್‌ ಬದಲಾವಣೆಗಾಗಿ ಟ್ರಾನ್ಸ್‌ಫಾರ್ಮರ್‌ ಬ್ಯಾಂಕ್‌ ಸ್ಥಾಪಿಸಲಾಗುವುದು. ಮುಂದಿನ ದಿನಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳು ಕೆಟ್ಟು ಹೋದ 24 ಗಂಟೆಗಳಲ್ಲಿ ಬದಲಿಸಲಾಗುವುದು. ಗಂಗಾಕಲ್ಯಾಣ ಯೋಜನೆಯಡಿ ಬೋರ್‌ವೆಲ್‌ ಸಿದ್ಧವಾದ 30 ದಿನಗಳ ಒಳಗಾಗಿ ವಿದ್ಯುತ್‌ ಸಂಪರ್ಕ ನೀಡಲಾಗುವುದು. ಅನಗತ್ಯವಾಗಿ ರೈತರ ಓಡಾಟವನ್ನು ತಪ್ಪಿಸಲಾಗುವುದು ಎಂದು ಹೇಳಿದರು.

ಎಲೆಕ್ಟ್ರಿಕ್‌ ರಿಚಾರ್ಜ್‌ ಕೇಂದ್ರಗಳು: 
ಮಾರುಕಟ್ಟೆಗೆ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವುದರಿಂದ ರಾಜ್ಯದಾದ್ಯಂತ ಎಲೆಕ್ಟ್ರಿಕ್‌ ರಿಚಾರ್ಜ್‌ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.