ಹಿರಿಯರ ಅನುಭವಪೂರಿತ ಮಾರ್ಗದರ್ಶನದಿಂದ ಜಿಲ್ಲೆಯ ಅಭಿವೃದ್ದಿಯ ಸಂಕಲ್ಪ: ಶಾಸಕ ರಘುಪತಿ ಭಟ್

ಉಡುಪಿ: ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಕಾರ್ಯವನ್ನು ಮಾಡುವಾಗ ಹಿರಿಯರ ಆಶೀರ್ವಾದ ಪಡೆಯುವ ಸಂಸ್ಕೃತಿ ಇದೆ. ಹಿರಿಯರ ಅನುಭವಗಳು ಮುಂದಿನ ಪೀಳಿಗೆಗೆ ದಾರಿದೀಪವಿದ್ದಂತೆ. ಪ್ರಸ್ತುತ ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿನ ಹಿರಿಯ ನಾಗರೀಕರ ಸಂಘಟನೆಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಮುಂದಿನ ಅಭಿವೃದ್ಧಿಯ ಕುರಿತು ಜಿಲ್ಲೆಯ ಹಿರಿಯ ನಾಗರೀಕರು ತಮ್ಮ ಸಲಹೆ, ಅನುಭವಪೂರಿತ ಮಾರ್ಗದರ್ಶನಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಹೇಳಿದರು.

ಅವರು ಶನಿವಾರದಂದು ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿರುವ ಹಿರಿಯ ನಾಗರೀಕರನ್ನು ಗೌರವಿಸುವ ಮನಸ್ಥಿತಿ ಎಲ್ಲೆಡೆ ಮೂಡಬೇಕಿದೆ. ಹಿರಿಯ ನಾಗರೀಕರಿಗೆ ಸಾಂತ್ವನ ಹಾಗೂ ನೆಮ್ಮದಿಯ ಜೀವನ ಅಗತ್ಯವಿದ್ದು ಮಕ್ಕಳು ಇದನ್ನು ನೀಡಬೇಕು ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಹಿರಿಯ ನಾಗರೀಕರ ಸಮಸ್ಯೆಗಳ ಬಗ್ಗೆ ನಿಯಮಿತವಾಗಿ ಸಭೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸಹಾಯವಾಣಿಗೆ ಬರುವ ದೂರುಗಳ ಕುರಿತು ತಕ್ಷಣ ಸ್ಪಂದಿಸಿ, ಏಕಗವಾಕ್ಷಿ ಮೂಲಕ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1090 ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ವಕೀಲರ ಸಂಘದ ಅಧ್ಯಕ್ಷ ನಾಗರಾಜ್, ಹಿರಿಯ ನಾಗರೀಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಸಿ.ಎಸ್.ರಾವ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ರತ್ನ, ಜಿಲ್ಲೆಯ ವಿವಿಧ ಹಿರಿಯ ನಾಗರೀಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವೀಣಾ ವಿವೇಕಾನಂದ ಸ್ವಾಗತಿಸಿದರು. ರವೀಂದ್ರ ನಿರೂಪಿಸಿದರು. ವಿಶ್ವನಾಥ್ ಹೆಗಡೆ ವಂದಿಸಿದರು. ಹಿರಿಯ ನಾಗರೀಕರಿಗೆ ಉಚಿತ ಆರೋಗ್ಯ ತಪಾಸಣೆ, ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ನಡೆಯಿತು.