ಉಡುಪಿ: ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಯೋಗಬನದಲ್ಲಿ ಉದ್ಘಾಟನೆಯಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ವಿವೇಕ ಉಡುಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
“ಡಿವೈನ್ ಪಾರ್ಕ್ನ ಪಾವನ ಅಂಗಸಂಸ್ಥೆಯಾದ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಜಗತ್ತಿನ ಅತಿ ಎತ್ತರದ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾಲಯದ ಕುಲಪತಿಗಳಾದ ಎಚ್.ಆರ್.ನಾಗೇಂದ್ರ ಅವರು ಉದ್ಘಾಟಿಸಲಿದ್ದಾರೆ’ ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಾಗವಹಿಸಲಿದ್ದಾರೆ ‘ ಎಂದು ಮಾಹಿತಿ ನೀಡಿದರು.
ಮಧ್ಯಾಹ್ನದಿಂದ ರಾತ್ರಿವರೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.
ಆಸ್ಪತ್ರೆ ವಿಶೇಷತೆ:
ಪ್ರಾಚೀನ ದೇಗುಲದ ವಾಸ್ತು ವಿನ್ಯಾಸವನ್ನು ಹೊಂದಿದ ಜಗತ್ತಿನ ಪ್ರಥಮ ಯೋಗ ಆಸ್ಪತ್ರೆ, ಆಯುಷ್ ವಿಭಾಗದಲ್ಲಿ ದೇಶದ ಪ್ರಥಮ ಪರಿಸರ ಸ್ನೇಹಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ. ಕರಾವಳಿಯ ಪ್ರಾಚೀನ ಶೈಲಿಯಲ್ಲಿ ನಿರ್ಮಾಣಗೊಂಡಿದೆ. ಪ್ರಕೃತಿ, ಯೋಗ, ಆಹಾರ, ಆಧ್ಯಾತ್ಮಿಕ, ಸಂಗೀತ, ಹಸಿರು, ಹಾಸ್ಯ, ಮೌನ ಚಿಕಿತ್ಸೆಯ ಸಂಗಮ.
ಏನಿದು ಡಿವೈನ್ ಪಾರ್ಕ್ ಟ್ರಸ್ಟ್:
ವ್ಯಕ್ತಿತ್ವ ನಿರ್ಮಾಣ ಹಾಗೂ ರಾಷ್ಟ್ರೋಥ್ಧಾನದ ಬೇರೆ ಬೇರೆ ಯೋಜನೆಗಳಲ್ಲಿ ಅಧ್ಯಾತ್ಮ, ಆರೋಗ್ಯ, ಯೋಗದ ಮಹಿಮೆಯನ್ನು ತಿಳಿಸಿಕೊಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.
ಪ್ರತಿಮೆ ವಿಶೇಷತೆ:
ಇದು ಜಗತ್ತಿನಲ್ಲೇ ಅತಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆಯಾಗಿದೆ. 35 ಅಡಿ ಎತ್ತರ ಇದೆ. ಪ್ರತಿಮೆಗೆ ವಿಶೇಷವಾದ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಹಸಿರು ಹುಲ್ಲು ಹಾಸಿನ ನಡುವೆ ಪ್ರತಿಮೆಯನ್ನು ಇರಿಸಲಾಗಿದೆ ಎಂದರು
ಗೋಷ್ಠಿಯಲ್ಲಿ ಡಿವೈನ್ಪಾರ್ಕ್ ಪದಾಧಿಕಾರಿಗಳಾದ ಸುದೇಶ್ ರಾವ್, ಅಜಿತ್ ಅಮೀನ್, ಸಿ.ಆರ್.ಮಂಜುನಾಥ್ ಇದ್ದರು.












