ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರು ಶನಿವಾರ ಮಧ್ಯಾಹ್ನ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ರಾಮ ಮನೋಹರ ಲೋಹಿಯಾ ಅಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ರಾತ್ರಿಯೂ ಡಿ. ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಸೆ.13 ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಶುಕ್ರವಾರ ನ್ಯಾಯಾಲಯದಲ್ಲಿ ಆರೋಗ್ಯದ ಸಮಸ್ಯೆಯ ಕಾರಣ ಡಿ.ಕೆ.ಶಿವಕುಮಾರ್ ಜಾಮೀನು ಯಾಚಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ನೀಡಲು ಒಪ್ಪದಿದ್ದರೂ ಡಿ.ಕೆ.ಶಿವಕುಮಾರ್ ಆರೋಗ್ಯ ಬಗ್ಗೆ ಮುತುವರ್ಜಿ ವಹಿಸುವಂತೆ ಸೂಚಿಸಿತು. ಸೆ.17 ರವರೆಗೆ ನಾಲ್ಕು ದಿನಗಳ ಕಾಲ ಇ.ಡಿ. ಕಸ್ಟಡಿಗೆ ನೀಡುವಂತೆ ನ್ಯಾಯಾಲಯ ಆದೇಶ ನೀಡಿತ್ತು.
















