ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (ಕೆಎಸ್ಒಯು) ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಉಚಿತ ಶಿಕ್ಷಣ ನೀಡಲಿದೆ. ಈ ಸಂಬಂಧ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜೊತೆ ವಿ.ವಿಯು ಬುಧವಾರ ಒಡಂಬಡಿಕೆ ಮಾಡಿಕೊಂಡಿದೆ.
‘ಇಲಾಖೆ ₹ 5.05 ಕೋಟಿ ಅನುದಾನ ನೀಡಿದೆ. ಇದನ್ನು ಬಳಸಿ ಮುಸ್ಲಿಂ, ಕ್ರೈಸ್ತ, ಬೌದ್ಧ, ಸಿಖ್, ಜೈನ್, ಪಾರ್ಸಿ ಸಮುದಾಯದ 4,500 ವಿದ್ಯಾರ್ಥಿಗಳವರೆಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು’ ಎಂದು ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಇಲಾಖೆಯೇ ಪ್ರವೇಶ ಶುಲ್ಕ ಭರಿಸಲಿದೆ. ಸರ್ಕಾರ ಬಜೆಟ್ನಲ್ಲಿಯೇ ಅನುದಾನ ಮೀಸಲಿಟ್ಟಿತ್ತು. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ, ಇಲ್ಲವೇ ಕೇಂದ್ರ ಕಚೇರಿ ಅಥವಾ ಪ್ರಾದೇಶಿಕ ಕೇಂದ್ರಗಳಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು’ ಎಂದು ಮಾಹಿತಿ ನೀಡಿದರು.












