ವಿಶಾಖಪಟ್ಟಣದಲ್ಲಿ ಅನಿಲ ಸೋರಿಕೆ: 8 ಮಂದಿ ಸಾವು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ

ವಿಶಾಖಪಟ್ಟಣ: ಇಲ್ಲಿನ ವೆಂಕಟಾಪುರದಲ್ಲಿರುವ ಎಲ್‌ಜಿ ಪಾಲಿಮರ್ಸ್‌ನಲ್ಲಿ ಇಂದು ಸಂಭವಿಸಿದ ಅನಿಲ ಸೋರಿಕೆ ದುರ್ಘಟನೆಯಲ್ಲಿ 8 ಮಂದಿ ಸಾವಿಗೀಡಾಗಿದ್ದು, 1000ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
ದುರಂತ ನಡೆದ ಬಳಿಕ ಪ್ರಜ್ಞೆ ತಪ್ಪಿದ ಮಕ್ಕಳನ್ನು ಎತ್ತಿಕೊಂಡು ಓಡುತ್ತಿರುವ ಹೆತ್ತವರು, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಿದ್ದಿರುವ ಜನರ ಚಿತ್ರಣ ಮನಕಲಕುವಂತಿತ್ತು.
ವಿಶಾಖಪಟ್ಟಣದ ಕಾರ್ಖಾನೆಯಲ್ಲಿ ಬೆಳ್ಳಂಬೆಳಿಗ್ಗೆ ಸಿಂಥೆಟಿಕ್ ರಬ್ಬರ್ ಮತ್ತು ರೆಸಿನ್ಸ್ ಮಾಡಲು ಬಳಸುವ ರಾಸಾಯನಿ ಸ್ಟೈರೆನ್ ಸೋರಿಕೆಯಾಗಿದೆ. ಇದರಿಂದ ನಿದ್ರೆಯ ಮಂಪರಿನಲ್ಲಿದ್ದ ಗೋಪಾಲಪಟನಂ ಗ್ರಾಮದಲ್ಲಿನ ಜನರು ಕಂಗಾಲಾಗಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ.
ನಿದ್ದೆಯಲ್ಲಿಯೇ ಹಲವಾರು ಮಂದಿ ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಜನರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಾಗ ಆಟೋ, ದ್ವಿಚಕ್ರವಾಹನಗಳಲ್ಲಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ವಿಶಾಖಪಟ್ಟಣದ ಈ ದೃಶ್ಯ 1984ರಲ್ಲಿ ನಡೆದ ಭೋಪಾಲ ಅನಿಲ ದುರಂತವನ್ನು ನೆನಪಿಸಿತ್ತು. ಭೋಪಾಲದಲ್ಲಿ  ಯೂನಿಯನ್ ಕಾರ್ಬೈಡ್ ಘಟಕದಿಂದ ಅನಿಲ ಸೋರಿಕೆಯಾಗಿ ಸಂಭವಿಸಿದ ದುರಂತದಲ್ಲಿ 3,500 ಮಂದಿ ಸಾವಿಗೀಡಾಗಿದ್ದರು.