ಹೆಣ್ಣುಮಕ್ಕಳು ವೀರ ವನಿತೆಯರ ಧೈರ್ಯ ಸಾಹಸ ಪ್ರವೃತ್ತಿಯನ್ನು ರೂಢಿಸಿಕೊಳ್ಳಿ: ನ್ಯಾ. ಶಾಂತವೀರ ಶಿವಪ್ಪ

ಉಡುಪಿ: ಸರಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಅನೇಕ ಕಾನೂನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಹೆಣ್ಣು ಮಕ್ಕಳು ಅರಿವು ಹೊಂದುವುದರೊಂದಿಗೆ ಅವುಗಳ ಉಪಯೋಗ ಪಡೆದುಕೊಳ್ಳಬೇಕು. ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಸ್ವಂತ ಉದ್ಯೋಗ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು. ವೀರರಾಣಿ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕ ಸೇರಿದಂತೆ ಮತ್ತಿತರ ವೀರ ವನಿತೆಯರ ಧೈರ್ಯ ಸಾಹಸ ಪ್ರವೃತ್ತಿಯನ್ನು ಪ್ರತಿಯೊಬ್ಬ ಹೆಣ್ಣುಮಕ್ಕಳು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ ಹೇಳಿದರು.

ಅವರು ಮಂಗಳವಾರ ಕಲ್ಯಾಣಪುರ ಸಂತೆಕಟ್ಟೆಯ ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಇಲಾಖೆ, ರೋಟರಿ, ಚೈಲ್ಡ್ ಲೈನ್ 1098 ಉಡುಪಿ ಮತ್ತು ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್ ಸಂತೆಕಟ್ಟೆ ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗೌರವಯುತವಾದ ಸ್ಥಾನವಿದೆ. ಇವುಗಳ ಜೊತೆಗೆ ಅವರ ರಕ್ಷಣೆಗೆ ಹುಟ್ಟಿನಿಂದ ಸಾವಿನವರೆಗೆ ರಕ್ಷಿಸಲು ಅನೇಕ ಕಾನೂನುಗಳನ್ನು ಹೆಣ್ಣು ಮಕ್ಕಳಿಗಾಗಿಯೇ ತಂದಿದೆ. ಪ್ರಸವ ಪೂರ್ವದಲ್ಲಿ ಭ್ರೂಣ ಹತ್ಯೆ ತಡೆಯಲು ಭ್ರೂಣ ಹತ್ಯೆ ನಿಷೇಧ ಕಾನೂನನ್ನು ಸರಕಾರ ಜಾರಿಗೆ ತಂದಿರುವುದನ್ನು ನಾವು ಕಾಣುತ್ತಿದ್ದೇವೆ ಎಂದರು.

ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ವಿದ್ಯಾವಂತರಾಗುವುದರ ಜೊತೆಗೆ ವಿಶ್ವದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದು, ಪುರುಷರಿಗಿಂತ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸಿದ್ದಾರೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು ಶೇ. 90 ರಷ್ಟು ಕಡಿಮೆಯಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಹೆಣ್ಣು ಮಕ್ಕಳ ಮೇಲೆ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಈ ಬಗ್ಗೆ ಹೆಣ್ಣುಮಕ್ಕಳು ಹಾಗೂ ಪೋಷಕರು ಜಾಗೃತರಾಗಿರಬೇಕು. ಹೆಣ್ಣುಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ನಾವು ಯಾರಿಗಿಂತ ಕಡಿಮೆ ಇಲ್ಲ ಎಂಬ ಬಗ್ಗೆ ಮನೋಜ್ಞಾನವನ್ನು ಬೆಳೆಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಬಳಕೆಯೊಂದಿಗೆ ನೆಟ್ ಬ್ಯಾಂಕಿನಲ್ಲಿ ಹಣವನ್ನು ಲಪಟಾಯಿಸುವುದು ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ಕದಿಯುವ ಸಾಧ್ಯತೆಗಳಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಮೂಢನಂಬಿಕೆಗಳಿಂದ ದೂರವಿರಬೇಕು. ಇತ್ತೀಚಿನ ದಿನಗಳಲ್ಲಿ ಗಂಡು ಹೆಣ್ಣಿನ ಅನುಪಾತ ಹೆಚ್ಚುತ್ತಿದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರ ಹೆಣ್ಣುಮಕ್ಕಳ ಕಲ್ಯಾಣಾಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳು ಜಾರಿಗೆ ತಂದಿದ್ದು, ಇದು ಸಮಾಜದ ಕಟ್ಟ ಕಡೆಯ ಹೆಣ್ಣು ಮಕ್ಕಳಿಗೂ ದೊರೆಯುವಂತಾಗಬೇಕು. ಹೆಣ್ಣುಮಕ್ಕಳಾದ ನಾವುಗಳು ನಮ್ಮ ಕಾರ್ಯಕ್ಷಮತೆಯನ್ನು ದಕ್ಷತೆ ಹಾಗೂ ಯಾರಿಗಿಂತ ಕಡಿಮೆಯಿಲ್ಲ ಎಂಬ ರೀತಿಯಲ್ಲಿ ಎಲ್ಲಾ ಕ್ಷೇತ್ರದಲ್ಲಿಯೂ ಮಾಡಿ ತೋರಿಸಬೇಕು. 12 ನೇ ಶತಮಾನದ ವಚನ ಸಾಹಿತಿಗಳಾದ ಅಕ್ಕಮಹಾದೇವಿಯವರು ಸಾಮಾಜಿಕ ಕಟ್ಟುಪಾಡುಗಳನ್ನು ತ್ಯಜಿಸಿ, ಸಮಾಜ ಸುಧಾರಣೆಗಾಗಿ ಕೆಲಸ ಮಾಡಿರುವುದನ್ನು ನಾವು ಚರಿತ್ರೆಯಲ್ಲಿ ಓದಿದ್ದೇವೆ ಎಂದ ಅವರು, ಪ್ರಾಚೀನ ಕಾಲದಿಂದಲೂ ಸಹ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯತ್ತಲೇ ಬಂದಿವೆ. ಇವುಗಳನ್ನು ಕೊನೆಗಾಣಿಸಲು ಹೆಣ್ಣುಮಕ್ಕಳಾದ ನಾವುಗಳೇ ಮುಂದಾಗಬೇಕು ಎಂದರು.

ಚೈಲ್ಡ್ ಲೈನ್ ನಿರ್ದೇಶಕ ರೋ. ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪ್ರಸೂತಿ ತಜ್ಞ ಡಾ. ಪ್ರತಾಪ್ ಕುಮಾರ್ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಬಗ್ಗೆ ಹಾಗೂ ಮಾಧವ ಕೃಪಾ ಶಾಲೆಯ ವಿದ್ಯಾರ್ಥಿನಿ ಕು. ಆರ್ಯ ಪ್ರಸೀದ ಹದಿಹರೆಯದ ಹೆಣ್ಣುಮಕ್ಕಳಲ್ಲಿ ನಾಯಕತ್ವವನ್ನು ಬೆಂಬಲಿಸುವಲ್ಲಿ ಸಮಾಜದ ಪಾತ್ರ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಧನ್ವಂತರಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಮಹಿಳಾ ಸಬಲೀಕರಣ ಕುರಿತು ನಾಟಕ ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಅನಾಥ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ ಅನ್ನು ವಿತರಿಸಲಾಯಿತು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್‌ನ ಅಧ್ಯಕ್ಷ ಡಾ. ಉಮೇಶ್ ಪ್ರಭು, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ರೋ. ನಾರಾಯಣ ಬಿ.ಕೆ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರೋಟರಿ ಅಧ್ಯಕ್ಷ ಸುಬ್ರಹ್ಮಣ್ಯ ಕಾರಂತ ಸ್ವಾಗತಿಸಿ, ಚೈಲ್ಡ್ ಲೈನ್ ಸಂಯೋಜಕಿ ಜ್ಯೋತಿ ನಿರೂಪಿಸಿದರೆ, ಚೈಲ್ಡ್ ಲೈನ್ ಸಹ ನಿರ್ದೇಶಕ ರೋ.ಗುರುರಾಜ್ ಭಟ್ ವಂದಿಸಿದರು.