ನವದೆಹಲಿ: ಕೃಷಿ ಮಸೂದೆಯನ್ನು ವಿರೋಧಿಸಿ ಕೇಂದ್ರ ಆಹಾರ ಸಂಸ್ಕರಣ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಗುರುವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರಬಂದಿದ್ದಾರೆ. ಕೌರ್ ಅವರು ಎನ್ ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಶಿರೋಮಣಿ ಅಕಾಲಿ ದಳದ ಸಂಸದೆ.
ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ಕೃಷಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಹರ್ಸಿಮ್ರತ್ ಕೌರ್ ತಮ್ಮ ರಾಜೀನಾಮೆಯನ್ನು ಮೋದಿ ಅವರಿಗೆ ಸಲ್ಲಿಸಿದ್ದಾರೆ.
ಪಕ್ಷದ ವಕ್ತಾರ ಹರ್ಚರಣ್ ಬೈನ್ಸ್ ಅವರು ಈ ವಿಚಾರವನ್ನೂ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
‘ಕೇಂದ್ರದ ರೈತ ವಿರೋಧಿ ಶಾಸನಗಳನ್ನು ವಿರೋಧಿಸಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರೈತರು, ಮಕ್ಕಳು ಮತ್ತು ಸೋದರಿಯರ ಪರವಾದ ನನ್ನ ನಿಲುವಿನ ಬಗ್ಗೆ ನನಗೆ ಹೆಮ್ಮೆ ಇದೆ,’ ಎಂದು ಹರ್ಸಿಮ್ರತ್ ಕೌರ್ ಟ್ವೀಟ್ ಮಾಡಿದ್ದಾರೆ.












