ಉಡುಪಿ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್ ಬಳಿ ಭಾನುವಾರ (ಸೆ.20) ನಡೆದಿದೆ.
ಅಪಘಾತದಲ್ಲಿ ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದು, ಅವರ ಕಾರು ಚಾಲಕ ಹಾಗೂ ಆಪ್ತ ಸಹಾಯಕ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಕಾರ್ಕಳ–ಮೂಡುಬಿದಿರೆ ಹೆದ್ದಾರಿಯಲ್ಲಿ ಕಾರು ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
















