ಜ.18ರಿಂದ ಮಲ್ಪೆ ಕಡಲ ಕಿನಾರೆಯಲ್ಲಿ ಅಂತರರಾಷ್ಟ್ರೀಯ ಬೀಚ್ ದ್ರಾಕ್ಷಾರಸ ಉತ್ಸವ

ಉಡುಪಿ: ಅಂತರರಾಷ್ಟ್ರೀಯ ಬೀಚ್ ದ್ರಾಕ್ಷಾರಸ ಉತ್ಸವ ಮಲ್ಪೆ ಕಡಲ ಕಿನಾರೆಯಲ್ಲಿ ಜ.18ರಿಂದ 20ರ ವರೆಗೆ ನಡೆಯಲಿದೆ.‌
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದ್ರಾಕ್ಷಾರಸ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಟಿ. ಸೋಮು ಈ ಕುರಿತು ಮಾಹಿತಿ ನೀಡಿ,  ಕರ್ನಾಟಕದಲ್ಲಿ ವೈನ್ ಉತ್ಪಾದನೆಗೆ ಸೂಕ್ತವಾದ ದ್ರಾಕ್ಷಿ ತಳಿಗಳನ್ನು ಬೆಳೆಯಲು ಮತ್ತು ರಾಜ್ಯದ ವೈನ್ ತಯಾರಿಕೆಗೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆ ಒದಗಿಸಿಕೊಡುವುದು ಈ ಉತ್ಸವದ ಮುಖ್ಯ ಉದ್ದೇಶವಾಗಿದೆ ಎಂದರು.
ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಸುಮಾರು 10ರಿಂದ 12 ವೈನರಿಗಳು ಭಾಗವಹಿಸುವರು. ಸುಮಾರು 150ಕ್ಕೂ ಹೆಚ್ಚಿನ ವಿವಿಧ ಬ್ರಾಂಡ್ ಗಳ ವೈನ್ ಗಳನ್ನು ಪ್ರದರ್ಶಿಸಲಾಗುವುದು. ಹಳೆಯ ವೈನ್ ಪ್ರದೇಶಗಳಾದ ಯುರೋಪ್ ಖಂಡ ಹಾಗೂ ಹೊಸ ವೈನ್ ಪ್ರದೇಶಗಳಾದ ಆಸ್ಟ್ರೇಲಿಯ, ನ್ಯೂಜಿಲ್ಯಾಂಡ್, ಚಿಲ್ಲಿ, ಅಮೇರಿಕಾ ಸೇರಿದಂತೆ ಇತರೆ ದೇಶಗಳ ವೈನ್ ಪ್ರದರ್ಶನ ಮತ್ತು ಮಾರಾಟ ಸಹ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಅಬಕಾರಿ ಇಲಾಖೆ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಹಾಗೂ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಈ ಉತ್ಸವವನ್ನು ಏರ್ಪಡಿಸಲಾಗಿದೆ. ವೈನ್ ಬಳಕೆಯನ್ನು‌ ಉತ್ತೇಜಿಸುವ ಉದ್ದೇಶದಿಂದ ಹಾಗೂ ದ್ರಾಕ್ಷಿ ಬೆಳೆಗಾರರಿಗೆ ಹೆಚ್ಚು ಪ್ರೋತ್ಸಾಹ ನೀಡುವ ಸಲುವಾಗಿ ಈ ಉತ್ಸವವನ್ನು‌ ಹಮ್ಮಿಕೊಳ್ಳಲಾಗಿದೆ.  ವೈನ್ ದ್ರಾಕ್ಷಿ ಬೆಳೆಯುವ ಹಾಗೂ ವೈನ್ ತಯಾರಿಕೆ ಬಗ್ಗೆ ತರಬೇತಿ ನೀಡುವುದು. ವೈನ್ ತಯಾರಕರು ಹಾಗೂ ಸಾರ್ವಜನಿಕರ ನಡುವೆ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಎಲ್ಲ ವೈನ್ ಬ್ರಾಂಡ್ ಮಾರಾಟಗಳ ಮೇಲೆ ಶೇ. 10ರಷ್ಟು ರಿಯಾಯಿತಿ ಇರಲಿದೆ. ಮೊದಲ ದಿನ ಸಾರ್ವಜನಿಕರಿಗೆ ಮುಕ್ತ ಅವಕಾಶ ಇದೆ. ನಂತರದ ಎರಡು ದಿನ 20 ಪ್ರವೇಶ ದರ ನಿಗದಿಪಡಿಸಲಾಗಿದೆ ಎಂದು ಹೇಳಿದರು.
ಜ. 18ರಂದು ಸಂಜೆ 6 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಉತ್ಸವಕ್ಕೆ ಚಾಲನೆ ನೀಡುವರು. ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ದ್ರಾಕ್ಷಾರಸ ಮಳಿಗೆಗಳನ್ನು ಉದ್ಘಾಟಿಸುವರು. ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಉಡುಪಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಅನಿತಾ ಭಾಸ್ಕರ್, ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಪ್ರಧಾನ ಕಾರ್ಯದರ್ಶಿ ಸರ್ವೇಶ್ ಕುಮಾರ್ ಉಪಸ್ಥಿತರಿದ್ದರು.