ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ

ಬೆಂಗಳೂರು: ಕರ್ನಾಟಕ ಸರಕಾರ ಸ್ವಾಮ್ಯದ, 77 ವರ್ಷಗಳ ಇತಿಹಾಸವಿರುವ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣ ಸಮಾರಂಭವು ಬೆಂಗಳೂರು ಯಶವಂತಪುರದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯಿತು.

ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಇವರು ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣವನ್ನು ನೆರವೇರಿಸಿ, ಅಭಿನಂದಿಸಿದರು.

ಸಂಸ್ಥೆಯ ನೂತನ ಅಧ್ಯಕ್ಷರಾಗಿ ಜಬಾಬ್ದಾರಿ ಸ್ವೀಕರಿಸಿದ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, 77 ವರ್ಷಗಳ ಭವ್ಯ ಇತಿಹಾಸವುಳ್ಳ ಎಮ್.ಇ.ಐ. ಸಂಸ್ಥೆಯ ಬೆಳವಣಿಗೆಯಲ್ಲಿ ಆಡಳಿತ ನಿರ್ದೇಶಕರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗದ ಪರಿಶ್ರಮ ಮಹತ್ವಪೂರ್ಣವಾಗಿದೆ. ದೊರೆತಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ನಿಭಾಯಿಸುವ ಮೂಲಕ ಎಲ್ಲರ ಸಂಘಟಿತ ಪ್ರಯತ್ನ ಮತ್ತು ಸಹಕಾರದಿಂದ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವ ಆತ್ಮವಿಶ್ವಾಸವಿದೆ. ನಿರ್ದಿಷ್ಟ ಗುರಿಯೊಂದಿಗೆ ಒಳ್ಳೆಯ ಸಂಗತಿಗಳನ್ನು ಅಳವಡಿಸಿಕೊಂಡು ಎಲ್ಲರೂ ಒಟ್ಟಾಗಿ ಒಂದಾಗಿ ಸಂಸ್ಥೆಯ ಶ್ರೇಯೋಭಿವೃದ್ದಿಗೆ ಶ್ರಮಿಸೋಣ ಎಂದರು.

ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಶೀಲಾ ಜಿ., ಪ್ರಧಾನ ವ್ಯವಸ್ಥಾಪಕ ಪ್ರಕಾಶ್ ಟಿ.ಆರ್., ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ ಹಾಗೂ ಉಡುಪಿ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ಮುಂತಾದವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಬೆಂಗಳೂರು ವಿಜಯ ನಗರ ಕಾರ್ಪೊರೇಟರ್ ಉಮೇಶ್ ಶೆಟ್ಟಿ, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು,‌ ಕೆ.ಉದಯಕುಮಾರ್ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಪ್ರಗತಿ ಉದಯಕುಮಾರ್ ಶೆಟ್ಟಿ, ಎಮ್.ಇ.ಐ. ಸಂಸ್ಥೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗ, ಬಿಜೆಪಿ ಉಡುಪಿ ಜಿಲ್ಲಾ ಪದಾಧಿಕಾರಿಗಳು, ಉಡುಪಿ ನಗರಸಭಾ ಸದಸ್ಯರು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.