ಉಡುಪಿ: ಈ ಬಾರಿಯ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 9823 ಅರ್ಜಿಗಳು ಬಂದಿವೆ. ಆದರೆ ಈ ಬಾರಿ ತೆರೆಯಮರೆಯಲ್ಲಿನ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಈ ಕುರಿತು ಈಗಾಗಲೇ ಆಯ್ಕೆ ಸಮಿತಿ ರಚನೆಯಾಗಿದ್ದು ಪ್ರಥಮ ಸಭೆ ಕೂಡಾ ಮುಗಿದಿದೆ ಆದಷ್ಟು ಶೀಘ್ರದಲ್ಲಿ ಅರ್ಹ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಅವರು ಭಾನುವಾರ ಆದಿ ಉಡುಪಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ 5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಉಡುಪಿ ಜಿಲ್ಲಾ ರಂಗ ಮಂದಿರ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ರಾಜ್ಯದಲ್ಲಿ ‘ಮಾತಾಡು ಮಾತಾಡು ಕನ್ನಡ’ ಕಾರ್ಯಕ್ರಮ ಅಭಿಯಾನವನ್ನು ನಡೆಸಲು ತಯಾರಿ ಪ್ರಕ್ರಿಯೆ ನಡೆಯುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಆದ್ಯತೆ ದೊರೆಯಬೇಕು ಎಂಬ ಉದ್ದೇಶದಿಂದ ಹೊಸ ಮಸೂದೆಯನ್ನು ವಿಧಾನಸಭೆಯಲ್ಲಿ ಈಗಾಗಲೇ ಮಂಡಿಸಿದ್ದು, ಅದರ ಸಾಧಕ ಭಾದಕಗಳ ಬಗ್ಗೆ 2 ತಿಂಗಳಲ್ಲಿ ಚರ್ಚೆ ನಡೆಸಿ, ಡಿಸೆಂಬರ್ ಅಧಿವೇಶನದಲ್ಲಿ ಇದಕ್ಕೆ ಮಂಜೂರಾತಿ ಪಡೆಯಲಾಗುವುದು ಎಂದರು.
ರಾಜ್ಯದ ಒಟ್ಟು 13 ಜಿಲ್ಲೆಗಳಲ್ಲಿ ರಂಗಮಂದಿರಗಳ ಕೊರತೆ ಇದ್ದು, ಈ ಕೊರತೆಯನ್ನು ನೀಗಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಹೊಸ ಸೂತ್ರ ರಚನೆ ಮಾಡಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ 5 ಕೋಟಿ ಮತ್ತು ತಾಲೂಕು ರಂಗ ಮಂದಿರಗಳ ನಿರ್ಮಾಣಕ್ಕೆ 2 ಕೋಟಿ ನೀಡುವ ತೀರ್ಮಾನ ಮಾಡಿದ್ದು ಅದರಂತೆ ರಾಜ್ಯಾದ್ಯಂತ ರಂಗ ಮಂದಿರಗಳ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತಿದೆ ಎಂದರು.
ಪ್ರಸ್ತುತ ಉಡುಪಿ ಜಿಲ್ಲೆಗೆ ಹಲವು ವರ್ಷಗಳ ಬೇಡಿಕೆಯಾಗಿದ್ದ ರಂಗ ಮಂದಿರ ನಿರ್ಮಾಣಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಮುಕ್ತಾಯಗೊಂಡು ಕಲಾಚಟುವಟಿಕೆಗಳು ನಿರಂತರವಾಗಿ ನಡೆಯುವಂತಾಗಬೇಕು ಎಂದರು.
ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ , ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.












