ಕಾರ್ಕಳದ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಾಲಯ ಉದ್ಘಾಟನೆ – ದಿನಾಂಕ ಘೋಷಣೆ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವು ಕಾರ್ಕಳದಲ್ಲಿ ಫೆಬ್ರವರಿ 18ರಿಂದ 28ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ‘ರಾಜಗುರು’, ‘ಧ್ಯಾನಯೋಗಿ’ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಅಧಿಕೃತವಾಗಿ ಘೋಷಿಸಿದರು. ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಮಹಾಮಸ್ತಕಾಭಿಷೇಕ ಕಾರ್ಯಾಲಯ ಉದ್ಘಾಟನೆ ಹಾಗೂ ದಿನಾಂಕ ಘೋಷಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು, ದೇವರ ಸಾನ್ನಿಧ್ಯವನ್ನು ಸದಾ ಮನಸ್ಸಿನಲ್ಲಿ ನೆನೆಸಿಕೊಳ್ಳಬೇಕು, ಶಾಂತಿ ಮತ್ತು ಅಹಿಂಸೆಯೇ ಜೀವನದ ಮೂಲ ಮೌಲ್ಯಗಳು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಮಹಾಮಸ್ತಕಾಭಿಷೇಕಕ್ಕೆ ಇನ್ನೂ 305 ದಿನಗಳು ಬಾಕಿ ಇವೆ. ಈ ಮಹೋತ್ಸವವನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು. ಎಸ್‌ಡಿಸಿಸಿ ಬ್ಯಾಂಕ್ ರಾಜ್ಯದಲ್ಲಿ ಮಹಿಳೆಯರ ಸಹಕಾರದಿಂದ ಬೆಳೆದಿರುವುದು ಒಂದು ಉದಾಹರಣೆ. ಸಮಾಜವು ಸಂಕಷ್ಟಗಳನ್ನು ಎದುರಿಸಿ ಬೆಳೆದಿದೆ. ಸರ್ಕಾರದಿಂದಲೂ ಎಲ್ಲಾ ರೀತಿಯ ಸೌಲಭ್ಯಗಳು ಮತ್ತು ಅನುದಾನಗಳು ಲಭ್ಯವಾಗುತ್ತಿದ್ದು, ಅವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಮಹಾಮಸ್ತಕಾಭಿಷೇಕ ಕಚೇರಿಯನ್ನು ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವಾ ಮಾತನಾಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮಹಾಮಸ್ತಕಾಭಿಷೇಕವನ್ನು ರಾಷ್ಟ್ರೀಯ ಹಬ್ಬದಂತೆ ಆಚರಿಸಬೇಕು. ಭಗವಾನ್ ಬಾಹುಬಲಿ ವಿಶ್ವಶಾಂತಿಯ ಸಂದೇಶ ನೀಡಿದ ಮಹಾನ್ ವ್ಯಕ್ತಿ. ಕೇಂದ್ರ ಸರ್ಕಾರದಿಂದ ಕಾರ್ಕಳಕ್ಕೆ ಅಗತ್ಯವಾದ ಸಹಕಾರವನ್ನು ಒದಗಿಸಲು ಪ್ರಯತ್ನಿಸಲಾಗುವುದು ಎಂದರು. ಜೈನ ಸಮುದಾಯವು ಶಾಂತಿಯ ಪ್ರತೀಕವಾಗಿದ್ದು, ಜಗತ್ತಿಗೆ ಉತ್ತಮ ಸಂದೇಶ ನೀಡಿದ ಸಮುದಾಯವಾಗಿದೆ ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಜಿಲ್ಲಾಡಳಿತವು ಈ ಮಹೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡಲು ಸಿದ್ಧವಾಗಿದೆ. ರಾಜ್ಯ ಸರ್ಕಾರ ನೀಡಿರುವ ಅನುದಾನಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಮಾತನಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಭೂಲೋಕದ ಸ್ವರ್ಗವಾಗಿದ್ದು, ತಮ್ಮ ಸಂಸ್ಕೃತಿ ಮತ್ತು ಪರಂಪರೆಯಿಂದ ದೇಶಕ್ಕೆ ಬೆಳಕು ಚೆಲ್ಲುತ್ತಿವೆ. ಈಗಾಗಲೇ 37 ಸಮಿತಿಗಳಲ್ಲಿ ಸುಮಾರು 600 ಮಂದಿ ತೊಡಗಿಸಿಕೊಂಡಿದ್ದು, ಈ ಮಹೋತ್ಸವದಿಂದ ಪ್ರವಾಸೋದ್ಯಮವೂ ಉತ್ತೇಜನ ಪಡೆಯಲಿದೆ ಎಂದರು.

ಅಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವಾ ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಅಳದಂಗಡಿ ಪದ್ಮಪ್ರಸಾದ್ ಅಜಿಲ, , ಜೀವಂಧರ ಬಲ್ಲಾಳ್, ರತ್ನಾಕರ ರಾಜ್ ಅರಸರು, ಹೆಚ್ಚುವರಿ ಎಸ್ಪಿ ಸುಧಾಕರ ನಾಯ್ಕ್, ಶಶಿಪ್ರಸಾದ್, ಗುಣಪಾಲ ಕಡಂಬ, ಸಿ.ಕೆ. ಬಳ್ಳಾಲ್, ಪ್ರವೀಣ್ ಕುಮಾರ್ ಇಂದ್ರ, ಶ್ರೀಧರ ಕಡಂಬ, ವೈ. ಸೂರಜ್ ಕುಮಾರ್, ಅನಂತರಾಜ ಪುವಾಣಿ, ಸಂಪತ್ ಸಾಮ್ರಾಜ್ಯ, ಸುದೀರ್ ಪಡಿವಾಳ್, ಜಿಪಂ ಸಿಇಒ ಪ್ರತಿಕ್ ಬಾಯಕ್, ಡಿವೈಎಸ್ಪಿ ಮಹೇಶ್ ಪ್ರಸಾದ್, ದೇವಿಪ್ರಸಾದ್ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಆರಂಭದಲ್ಲಿ ಸರ್ವೇಶ್ ಜೈನ್ ಪ್ರಾರ್ಥನೆ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಸ್ವಾಗತಿಸಿದರು. ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಮೋಹನ್ ಪಡಿವಾಳ್ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಹಾಮಸ್ತಕಾಭಿಷೇಕಕ್ಕಾಗಿ ರೂ. 3 ಲಕ್ಷ ದೇಣಿಗೆ ನೀಡುವ ಮೂಲಕ ಮಹೋತ್ಸವದ ಯಶಸ್ಸಿಗೆ ತಮ್ಮ ಕೊಡುಗೆಯನ್ನು ಸಲ್ಲಿಸಿದರು.