ಕುಂದಾಪುರ: ಕಾರು- ಬೈಕ್ ಮಧ್ಯೆ ಭೀಕರ ಅಪಘಾತ; ಇಬ್ಬರು ಸವಾರರು ಗಂಭೀರ

ಕುಂದಾಪುರ: ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ಸಮೀಪದ ಸಂಗಮ್ ಸರ್ಕಲ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದವರು ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳಲ್ಲಿ ನಾಲ್ಕು ಮಂದಿ ಯುವಕರು ಹೊಸನಗರದಿಂದ ಕುಂದಾಪುರಕ್ಕೆ ಬಂದಿದ್ದರು. ಹೊಸಗನಗರದಿಂದ ಸಿಗಂಧೂರು ಕ್ಷೇತ್ರಕ್ಕೆ ತೆರಳಿ, ಅಲ್ಲಿ ದೇವರ ದರ್ಶನ ಪಡೆದು ಕೋಡಿ ಬೀಚ್ ಗೆ ಹೋಗಲು ಕುಂದಾಪುರಕ್ಕೆ ಬಂದಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ ಸರ್ಕಲ್ ಬಳಿ ಅಂಗಡಿಯೊಂದರಲ್ಲಿ ಕೋಡಿ ಬೀಚ್ ಹೋಗುವ ದಾರಿ ಕೇಳಿಕೊಂಡು, ರಸ್ತೆ ಕ್ರಾಸ್ ಮಾಡುತ್ತಿದ್ದರು. ಈ ವೇಳೆ ಬೈಂದೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಗಾಳಿಯಲ್ಲಿ ತೇಲಿಕೊಂಡು ಹೋಗಿ 20 ಅಡಿ ದೂರದಲ್ಲಿ ಬಿದ್ದಿದ್ದಾರೆ ಎನ್ನಲಾಗಿದೆ.

ಇಬ್ಬರು ಸವಾರರಿಗೂ ಗಂಭೀರ ಸ್ವರೂಪದ ಗಾಯವಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಕಾರು ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ. ಕಾರು ಬೈಕ್ ಗೆ ಡಿಕ್ಕಿಯಾಗಿ ಡಿವೈಡರ್ ಮೇಲೆ ಹತ್ತಿದೆ. ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.