ಕುಂದಾಪುರ: ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಯ್ಯಪ್ಪ ವ್ರತಧಾರಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ.
ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಹಾಡಿಮನೆ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ.
ಸುಮಾರು 15 ಮಂದಿ ಅಯ್ಯಪ್ಪ ಮಾಲಾಧಾರಿಗಳು ಕೋಟೇಶ್ವರದಿಂದ ಹೆದ್ದಾರಿ ಮೂಲಕ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇಗುಲದೆಡೆಗೆ ಕಾಲ್ನಡಿಗೆ ಮೂಲಕ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಸ್ಥಳೀಯರು ತತ್ ಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. ಮತ್ತೋರ್ವ ಅಯ್ಯಪ್ಪ ವ್ರತಧಾರಿಗೂ ತೀವ್ರ ಸ್ವರೂಪದ ಗಾಯಗಳಾಗಿವೆ.


















