ಬೈಕ್ ಗೆ ಡಿಕ್ಕಿಯಾದ ಟೆಂಪೋ: ಕುಂದಾಪುರದ ಹೆಡ್ ಕಾನ್‌ಸ್ಟೇಬಲ್ ದಾರುಣ ಸಾವು

ಕುಂದಾಪುರ: ಭಾನುವಾರ ರಾತ್ರಿ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಂದಾಪುರ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಚಂದ್ರಶೇಖರ್(೪೨) ಸೋiವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. 

ಕರ್ತವ್ಯದ ನಿಮಿತ್ತ ಬ್ರಹ್ಮಾವರದಿಂದ ಕುಂದಾಪುರದತ್ತ ಚಂದ್ರಶೇಖರ್ ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆ ಬಳಿ ಹಿಂಬದಿಯಿಂದ ಟೆಂಪೋ ಡಿಕ್ಕಿ ಹೊಡೆದಿತ್ತು. ಓವರ್‌ಟೇಕ್ ಭರದಲ್ಲಿ ಟೆಂಪೋ ಚಾಲಕ ಚಂದ್ರಶೇಖರ್ ಚಲಾಯಿಸುತ್ತಿದ್ದ ಬೈಕಿಗೆ ಗುದ್ದಿ ಪರಾರಿಯಾಗಿದ್ದನು. ಅಪಘಾತದಿಂದ ಚಂದ್ರಶೇಖರ್ ರಸ್ತೆಗೆ ಬಿದ್ದು ಕುತ್ತಿಗೆ ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಅದೇ ವೇಳೆ ಉಡುಪಿಯಿಂದ ಸಭೆ ಮುಗಿಸಿ ಅದೇ ಮಾರ್ಗವಾಗಿ ಬರುತ್ತಿದ್ದ ಕುಂದಾಪುರ ಪಿಎಸ್‌ಐ ಹರೀಶ್ ಆರ್, ಹಾಗೂ ಚಾಲಕ ಲೋಕೇಶ್ ಮತ್ತು ಸಿಬ್ಬಂದಿಗಳು ಕೂಡಲೇ ಚಂದ್ರಶೇಖರ್ ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಚಂದ್ರ ಅವರು ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಇಪ್ಪತ್ತು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪ್ರಸ್ತುತ ಮೂರ್ನಾಲ್ಕು ವರ್ಷಗಳಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದರು.