ಕುಂದಾಪುರ: ವಿವಿಧ ಕ್ಷೇತ್ರದ ಸಾಧಕರಿಗೆ ‘ಸುರಭಿ ರಿ. ಬೈಂದೂರು’ ಸಂಸ್ಥೆಯು ಪ್ರತಿವರ್ಷ ಕೊಡಮಾಡುತ್ತಿರುವ ‘ಬಿಂದುಶ್ರೀ’ ಪ್ರಶಸ್ತಿಗೆ ಈ ಭಾರಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಆಯ್ಕೆಮಾಡಲಾಗಿದ್ದು, ಫೆ.3ರಂದು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಚಿನ್ನದ ಪದಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ಫೆಬ್ರವರಿ 3ರ ಸೋಮವಾರ ಸಂಜೆ 6 ಗಂಟೆಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು, ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೈಂದೂರು ಶಾಸಕ ಬಿ. ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಪತ್ರಕರ್ತ ಎಸ್. ಜನಾರ್ದನ ಮರವಂತೆ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಸಾಹಿತಿ ಓ.ಆರ್ ಪ್ರಕಾಶ್, ಪತ್ರಕರ್ತ ಅರುಣಕುಮಾರ್ ಶಿರೂರು ಮೊದಲಾದವರು ಉಪಸ್ಥಿತರಿರಲಿದ್ದಾರೆ.












