ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯಾದ್ಯಂತ ಅಧಿಕಾರಿಗಳ ಮೇಲೆ ‘ಲೋಕಾ’ ಪ್ರಹಾರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬುಧವಾರ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ, ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಚಿಕ್ಕಮಗಳೂರಿನ ಕಡೂರು ಪಟ್ಟಣದಲ್ಲಿರುವ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ದಾಳಿ‌ ನಡೆದಿದೆ. ನೇತ್ರಾವತಿ ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿದ್ದಾರೆ. ಈಕೆ 13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪ ಹೊತ್ತಿದ್ದಾರೆ.

ಮಂಡ್ಯದಲ್ಲಿ ಪಿಡಬ್ಲ್ಯುಡಿ ಇಲಾಖೆ ಇಇ ಹರ್ಷ ಎಂಬವರ ಮನೆ, ಕಚೇರಿ, ಕುಟುಂಬಸ್ಥರು, ಸಂಬಂಧಿಕರ ಮನೆ ಮೇಲೂ ಲೋಕ ದಾಳಿ ಮಾಡಿದೆ. ಇವರ ಮನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿದೆ. ಮಂಡ್ಯದ ಕಚೇರಿ, ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಆರು ಕಡೆ ದಾಳಿ ಮಾಡಿದ್ದಾರೆ.

ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.​​ ಮೈಸೂರಿನ ಜೆ.ಪಿ.ನಗರದ ಮನೆ, ವಿಜಯನಗರದ ಅಪಾರ್ಟ್‌ಮೆಂಟ್, ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ಞೇಂದ್ರ ಸಹೋದರನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ತುಮಕೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ಬಳಿಯಿರುವ ಕೆ.ಆರ್.ಡಿ.ಎಲ್ ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.