ಗೋ ಹತ್ಯೆ ನಿಷೇಧ, ಲವ್‌ ಜಿಹಾದ್‌ ತಡೆ ಕಾನೂನು ಜಾರಿಗೆ ಬಿಜೆಪಿ ಕಾರ್ಯಕಾರಣಿಯಲ್ಲಿ ನಿರ್ಣಯ: ನಳಿನ್

ಬೆಳಗಾವಿ: ಲವ್‌ ಜಿಹಾದ್‌ ತಡೆ ಕಾನೂನು ಜಾರಿಗೊಳಿಸುವುದರ ಜತೆಗೆ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ತರಲು ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮುಂದಿನ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ತಿಳಿಸಿದರು.

ಬೆಳಗಾವಿಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲವ್ ಜಿಹಾದ್ ಎನ್ನುವುದು ಬಹಳ ಆತಂಕದ ವಿಷಯ. ಪ್ರೀತಿ–ಪ್ರೇಮದ ಹೆಸರಿನಲ್ಲಿ ಮತಾಂತರ ಮಾಡಿದ ಹಲವು ಪ್ರಕರಣಗಳು ವರದಿಯಾಗಿವೆ. ಹೀಗಾಗಿ, ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು.

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಿಕೊಳ್ಳುವ ಮೂಲಕ ಗ್ರಾಮ ಸ್ವರಾಜ್ಯ ಪರಿಕಲ್ಪನೆಯಲ್ಲಿ ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.