ಉಡುಪಿ: ಕಳೆದ 43 ವರ್ಷಗಳಿಂದ ಸಹಕಾರಿ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಜನಸ್ನೇಹಿ ಸಹಕಾರಿ ಸಂಸ್ಥೆಯಾಗಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯವಹಾರ ನಡೆಸುತ್ತಾ ಕರಾವಳಿ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಮಹಾಲಕ್ಷೀ ಕೋ ಆಪರೇಟಿವ್ ಬ್ಯಾಂಕಿನ ನವೀಕೃತ ಉಚ್ಚಿಲ ಶಾಖೆ ಹಾಗೂ ನೂತನ ಎಟಿಎಂ ಉದ್ಘಾಟನಾ ಸಮಾರಂಭ ಜನವರಿ 9 ರಂದು ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಲಿದೆ.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಇದರ ಪ್ರವರ್ತಕ ಡಾ. ಜಿ. ಶಂಕರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕ ಸತೀಶ್ ಕಾಶೀನಾಥ ಮರಾಠೆ ನವೀಕೃತ ಶಾಖೆಯನ್ನು ಉದ್ಘಾಟಿಸುವರು. ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಸಹಕಾರ ಸಂಘಗಳ ನಿಬಂಧಕ ಎಸ್. ಜಿಯಾವುಲ್ಲಾ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಭಾಗವಹಿಸಲಿದ್ದಾರೆ.
ಬ್ಯಾಂಕಿನ ತುಳು ನಾಮ ಫಲಕವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಅನಾವರಣಗೊಳಿಸಲಿದ್ದಾರೆ.
ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಗೀತಾನಂದ ಫೌಂಡೇಶನ್ ಕೋಟ ಇದರ ಪ್ರವರ್ತಕ ಆನಂದ ಸಿ. ಕುಂದರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿಗಳಾದ ಸುರೇಶ್ ನಾಯಕ್ ಕುಯಿಲಾಡಿ, ಆನಂದ ಪಿ. ಸುವರ್ಣ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಎಚ್ ಡಿ ಎಫ್ ಸಿ ಬ್ಯಾಂಕಿನ ಕ್ಲಸ್ಟರ್ ಹೆಡ್ ಚಿದಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ಪಡುಬಿದ್ರೆ, ಶಿಲ್ಪಾ ಜಿ. ಸುವರ್ಣ, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಉಪಸ್ಥಿತರಿರಲಿದ್ದಾರೆ.
ಸಮಾರಂಭದಲ್ಲಿ ಕಾಪು ಪುರಸಭೆಯ ನೂತನ ಅಧ್ಯಕ್ಷ ಅನಿಲ್ ಕುಮಾರ್, ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಹಿರಿಯ ಅರ್ಚಕ ವೆಂಕಟ ನರಸಿಂಹ ಉಪಾಧ್ಯಾಯ, ರಾಜ್ಯ ಮೀನುಗಾರಿಕೆ ಇಲಾಖೆಯಿಂದ ನೀಡಲ್ಪಡುವ ಶ್ರೇಷ್ಠ ಮೀನುಗಾರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವ ಹಿರಿಯ ಮೀನುಗಾರ ರಾಮ ಕಾಂಚನ್, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರಣಾಮ್ ಕೆ ಸಾಲ್ಯಾನ್ ಮತ್ತು ಶ್ರೇಯಾ ಬಿ. ಕುಂದರ್ ಅವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಲಿದೆ.
ಕಳೆದ 11 ವರ್ಷದಿಂದ ನಿರಂತರವಾಗಿ ಸದಸ್ಯರಿಗೆ ಶೇ.18 ಡಿವಿಡೆಂಡ್ ನೀಡುತ್ತಿರುವ ಕರಾವಳಿಯ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾಲಕ್ಷೀ ಕೋ ಆಪರೇಟಿವ್ ಬ್ಯಾಂಕ್ ಪ್ರಸ್ತುತ ಯಶ್ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಉತ್ತಮ ಪ್ರಗತಿಯನ್ನು ದಾಖಲಿಸುತ್ತಿದೆ.
ಮಹಾಲಕ್ಷೀ ಕೋ ಆಪರೇಟಿವ್ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಲ್ಪೆ, ಗಂಗೊಳ್ಳಿ, ಮಂಗಳೂರು, ಹೆಜಮಾಡಿ, ಪಡುಉಚ್ಚಿಲ, ಉಡುಪಿ ಹಾಗೂ ಕುಂದಾಪುರ ಹೀಗೆ ಒಟ್ಟು 8 ಶಾಖೆಗಳನ್ನು ಹೊಂದಿದ್ದು, ಈಗಾಗಲೇ 4 ಶಾಖೆಗಳಾದ ಮಲ್ಪೆ, ಮಂಗಳೂರು, ಕುಂದಾಪುರ, ಸುರತ್ಕಲ್ ಮತ್ತು ಆಡಳಿತ ಕಛೇರಿ ಸ್ವಂತ ಕಟ್ಟಡದಲ್ಲಿ ವ್ಯವಹರಿಸುತ್ತಿದೆ.
ಪ್ರಸ್ತುತ ಬ್ಯಾಂಕಿನಲ್ಲಿ 22,248 ಸದಸ್ಯರಿದ್ದು, ಪಾಲು ಬಂಡವಾಳ ರೂ. 9.49 ಕೋಟಿ, ದುಡಿಯುವ ಬಂಡವಾಳ ರೂ. 260 ಕೋಟಿ, ಠೇವಣಿ ರೂ.224 ಕೋಟಿ, ಸಾಲ ಮತ್ತು ಮುಂಗಡ ರೂ.161.64 ಕೋಟಿಯಾಗಿದ್ದು, ಬ್ಯಾಂಕು ಲೆಕ್ಕ ಪರಿಶೋಧನೆಯಲ್ಲಿ “ಎ” ಶ್ರೇಣಿಯಲ್ಲಿದ್ದು ಸಹಕಾರ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನವರ ಮೆಚ್ಚುಗೆಗೆ ಪಾತ್ರವಾಗಿರುತ್ತದೆ.
ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಉಚ್ಚಿಲ ಶಾಖೆಯನ್ನು ನವೀಕರಿಸಿ ಆಧುನಿಕ ಶೈಲಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಬ್ಯಾಂಕಿಂಗ್ ಸೇವೆಗಳಿಗೆ ಅತಿ ಅವಶ್ಯಕವೆನಿಸಿರುವ RTGS/NEFT, EBIX CASH (Western Union Money Transfer), E Stamping, Safe Deposit Locker, ATM, Mobile Banking, Health Card, Insurance, PMFS ಸಾಮಾನ್ಯ ಸೇವಾ ಕೇಂದ್ರ ಸೌಲಭ್ಯಗಳನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ ಗ್ರಾಹಕರಿಗೆ ಇನ್ನಿತರ ಆಧುನಿಕ ತಂತ್ರಜ್ಞಾನದ ಸೇವೆಯನ್ನು ಒದಗಿಸುವುದರೊಂದಿಗೆ ಉತ್ತರ ಕನ್ನಡ ಜಿಲ್ಲೆ ಮತ್ತು ಬೆಂಗಳೂರಿನಲ್ಲಿಯೂ ಶಾಖೆಗಳನ್ನು ಆರಂಭಿಸುವ ಮೂಲಕ ವ್ಯವಹಾರ ವಿಸ್ತರಿಸುವ ಯೋಜನೆ ಕೂಡಾ ಆಡಳಿತ ಮಂಡಳಿಯ ಮುಂದಿದೆ.
ಮೀನುಗಾರ ಮಹಿಳಾ ಸ್ವ ಸಹಾಯ ಸಂಘಗಳಿಗೆ 5 ಲಕ್ಷದವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ವಿತರಣೆ, ಬೀದಿ ಬದಿ ವ್ಯಾಪಾರಸ್ಥರಿಗೆ ಕೇಂದ್ರ ಸರಕಾರದ ಬಡವರ ಬಂಧು ಯೋಜನೆಯಡಿ ಬಡ್ಡಿರಹಿತ ಸಾಲ ಯೋಜನೆ ಮತ್ತು ಉಚ್ಚಿಲ ಶಾಖೆಯ ಉದ್ಘಾಟನೆಯ ಅಂಗವಾಗಿ (15-01-2021 ರವರೆಗೆ) ಠೇವಣಿಗಳ ಮೇಲೆ 0.50% ಹೆಚ್ಚುವರಿ ಬಡ್ಡಿ ಹಾಗೂ ಹೊಸ ಗ್ರಾಹಕರಿಗೆ ಝೀರೋ ಬ್ಯಾಲೆನ್ಸ್ ಉಳಿತಾಯ ಖಾತೆ ಮತ್ತು ಉಚಿತ ಎಟಿಎಮ್ ಕಾರ್ಡ್ ನೀಡುವ ಯೋಜನೆಯನ್ನು (31-01-2021 ರವರೆಗೆ) ಹಮ್ಮಿಕೊಂಡಿದೆ ಮತ್ತು ಎಲ್ಲಾ ರೀತಿಯ ಸಾಲ ಸೌಲಭ್ಯ ಕಡಿಮೆ ಬಡ್ಡಿದರದಲ್ಲಿ ಲಭ್ಯವಿರುವುದಾಗಿ ಪ್ರಕಟಣೆ ತಿಳಿಸಿದೆ.












