ಕೊಡವೂರಿನಲ್ಲಿ ಮಹಾರುದ್ರಯಾಗದ ಪ್ರಯುಕ್ತ ಮೇ 18ರಂದು “ಬೃಹತ್ ಉದ್ಯೋಗ ಮೇಳ”

ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಮೇ 18ರಂದು ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಉದ್ಯೋಗ ಮೇಳದ ಅಧ್ಯಕ್ಷೆ ಡಾ.ದಿವ್ಯಾ ರಾಣಿ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಮೇಳದಲ್ಲಿ 60ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 6000ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಲಭ್ಯವಿರಲಿದೆ. ಮ್ಯಾನೇಜ್‌ಮೆಂಟ್, ಎಂಜಿನಿಯರಿಂಗ್, ಉತ್ಪಾದನಾ ವಲಯ, ಆರೋಗ್ಯ ಸೇವೆ, ಹೋಟೆಲ್, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಮಾರುಕಟ್ಟೆ, ತಾಂತ್ರಿಕ ಸೇವೆಗಳು, ಲಾಜಿಸ್ಟಿಕ್ಸ್ ಹಾಗೂ ಸೇವಾ ವಲಯ, ಕೌಶಲ್ಯ ವಿವಿಧ ಕ್ಷೇತ್ರಗಳ 60 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದರು.

ಟೊಯೋಟಾ-ಕಿರ್ಲೋಸ್ಕರ್, ಇನ್‌ವೆಂಜರ್ ಟೆಕ್ನಾಲಜೀಸ್, ಮೆಜೆಸ್ಟಿಕ್ ಗ್ಲೋಬಲ್ ಲಾಜಿಸ್ಟಿಕ್ಸ್, ಅನಾನ್ ಗ್ರೂಪ್, ವಿನ್‌ಮ್ಯಾನ್ ಸಾಫ್ಟ್‌ವೇರ್, ಅಮೆಜಾನ್, ಬ್ರೇವರಾ ಟೆಕ್ನಾಲಜೀಸ್, ವಿಆರ್‌ಎನ್ ಇನ್ಫೋಟೆಕ್, ಡಾ. ರೆಡ್ಡಿಸ್ ಫೌಂಡೇಶನ್, ಸ್ವಿಗ್ಗಿ, ಎಚ್‌ಡಿಎಫ್‌ಸಿ ಬ್ಯಾಂಕ್, ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಮತ್ತು ಅಕೋಲೇಡ್ ಸೇರಿದಂತೆ ಅನೇಕ ಪ್ರಮುಖ ಕಂಪನಿಗಳು ಪಾಲ್ಗೊಳ್ಳಲಿವೆ. ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐ, ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ವಿವಿಧ ಕೌಶಲ್ಯ ಆಧಾರಿತ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ 6,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಾಗಲಿವೆ.

ಅಭ್ಯರ್ಥಿಗಳು ನೇರ ಸಂದರ್ಶನಗಳಲ್ಲಿ ಭಾಗವಹಿಸುವುದು, ಕಂಪನಿ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವುದು ಹಾಗೂ ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಉಡುಪಿಯಲ್ಲಿ ಉದ್ಯೋಗ ಅವಕಾಶಗಳನ್ನು ಅರಿಯುವ ಅವಕಾಶ ಸಿಗಲಿದೆ. ಈ ಬಾರಿ ವಿಶೇಷವಾಗಿ ಸ್ಮಾರ್ಟ್ ಅಪ್ ಹಾಗೂ ಸ್ವಯಂ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಮೊದಲ ಬಾರಿಗೆ ಉಡುಪಿಯಲ್ಲಿ ಪರಿಚಯಿಸಲಾಗುತ್ತಿದೆ.

ಮಣಿಪಾಲ್ ಯುನಿವರ್ಸಲ್ ಬಿಸಿನೆಸ್ ಇಂಕ್ಯೂಬೇಟರ್ಸ್, ಯೆನೆಪೊಯ ಟೆಕ್ನಾಲಜಿ ಇಂಕ್ಯೂಬೇಟರ್ ಮತ್ತು ರುಡೈಟಿ ಸಂಸ್ಥೆಗಳು ಉದ್ಯಮ ಆರಂಭಿಸಲು ಬಯಸುವ ಯುವಕರಿಗೆ ಮಾರ್ಗದರ್ಶನ ಹಾಗೂ ಮೆಂಟರ್‌ಶಿಪ್ ನೀಡಲಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೇವತಿ ನಾಡ್ಗಿರಿ, ಸಾತ್ವಿಕ್ ಎಸ್ ಆಚಾರ್ಯ, ಧೃವ್ ರಾಜ್ ಉಪಸ್ಥಿತರಿದ್ದರು.