ಮಂಗಳೂರು: ಮೀನುಗಾರಿಕಾ ಬಂದರು ಅಭಿವೃದ್ಧಿಗೆ 50 ಲಕ್ಷ ಅನುದಾನ 

ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ಅವರ ನಿರಂತರ ಪ್ರಯತ್ನದಿಂದ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಮಂಜೂರಾಗಿದೆ.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅವ್ಯವಸ್ಥೆ ಉಂಟಾಗಿತ್ತು. ಇದನ್ನು ಮನಗಂಡು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಕಳೆದ ತಿಂಗಳು ಜೂ.19ರಂದು ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದರು. ಅನಂತರ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದರು. ಹೀಗಾಗಿ ನಡೆಯಬೇಕಾದ ಕೆಲಸ ಕಾರ್ಯಗಳ ಬಗ್ಗೆ ಪರಾಮರ್ಶಿಸಿದ್ದರು. ಇಲಾಖೆಯ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಿದ್ದರು.
ಹೀಗೆ ಶಾಸಕ ಕಾಮತ್ ಅವರ ನಿರಂತರ ಪ್ರಯತ್ನದಿಂದಾಗಿ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಮಂಜೂರಾಗಿದೆ. ಈ ಅನುದಾನ ಮಂಗಳೂರು ಮೀನುಗಾರಿಕಾ ಬಂದರಿನ ಹಳೇ ಧಕ್ಕೆಯ ದುರಸ್ತಿಗೆ, ಆಕ್ಷನ್ ಹಾಲ್ ರಿಪೇರಿಗೆ ಮತ್ತು ವಾರ್ಫ್ ನ ಕಾಂಕ್ರೀಟ್ ಕೆಲಸಗಳಿಗೆ ಬಳಕೆಯಾಗಲಿದೆ. ಶಾಸಕ ವೇದವ್ಯಾಸ ಕಾಮತ್ ಅವರ ತಕ್ಷಣ ಕಾರ್ಯಪ್ರವೃತ್ತರಾಗುವ ಶೈಲಿಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗುತ್ತಿರುವುದರಿಂದ ಸ್ಥಳೀಯ ಮೀನುಗಾರರು ಕೂಡ ಖುಷಿಗೊಂಡಿದ್ದಾರೆ. ಅವರು ಶಾಸಕ ಕಾಮತ್ ಅವರನ್ನು ಅಭಿನಂದಿಸಿದ್ದಾರೆ.