ಮಂಗಳೂರು: 2018ರಲ್ಲಿ ಪಣಂಬೂರು ಸಮೀಪದ ತೋಟ ಬೆಂಗ್ರೆ ಬೀಚ್ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ವಿವಿಧ ಆರೋಪಗಳಡಿ ದಂಡ ವಿಧಿಸಲಾಗಿದೆ.
ಸುಮಾರು ಎಂಟು ವರ್ಷಗಳ ನ್ಯಾಯಾಂಗ ಪ್ರಕ್ರಿಯೆಯ ಬಳಿಕ ಹೊರಬಿದ್ದ ಈ ತೀರ್ಪಿನಿಂದ ಸಂತ್ರಸ್ತೆಗೆ ನ್ಯಾಯ ದೊರೆತಂತಾಗಿದೆ ಎಂದು ಅಭಿಯೋಜನೆ ತಿಳಿಸಿದೆ.
2018ರ ನವೆಂಬರ್ 18ರಂದು ಮಹಿಳೆಯೊಬ್ಬರು ತಮ್ಮ ಪುರುಷ ಸ್ನೇಹಿತನೊಂದಿಗೆ ತೋಟ ಬೆಂಗ್ರೆ ಬೀಚ್ಗೆ ತೆರಳಿದ್ದ ವೇಳೆ, ತೋಟ ಬೆಂಗ್ರೆ ನಿವಾಸಿಗಳಾದ ಪ್ರಜ್ವಲ್ (33), ಅರುಣ್ ಅಮೀನ್ (34), ಆದಿತ್ಯ ಸಾಲಿಯನ್ (28) ಹಾಗೂ ಅಬ್ದುಲ್ ರಿಯಾಜ್ (40) ಸೇರಿದಂತೆ ನಾಲ್ವರು ಮತ್ತು ಮೂವರು ಬಾಲಾಪರಾಧಿಗಳು ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ, ಜುಲೈ 30, 2026ರಂದು ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ತಿಳಿಸಿದ್ದಾರೆ.
ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 341, 323, 354, 376D ಮತ್ತು 506 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v-a) ಮತ್ತು 3(1)(w)(i) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಇದಲ್ಲದೆ, ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ತಲಾ ಒಂದು ವರ್ಷದ ಸರಳ ಜೈಲು ಶಿಕ್ಷೆ ಮತ್ತು ₹5,000 ದಂಡ, ಸೆಕ್ಷನ್ 506ರ ಅಡಿಯಲ್ಲಿ ತಲಾ ಒಂದು ವರ್ಷದ ಸರಳ ಜೈಲು ಶಿಕ್ಷೆ ಮತ್ತು ₹2,000 ದಂಡ, ಸೆಕ್ಷನ್ 323ರ ಅಡಿಯಲ್ಲಿ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು ₹1,000 ದಂಡ ಹಾಗೂ ಸೆಕ್ಷನ್ 341ರ ಅಡಿಯಲ್ಲಿ ತಲಾ ₹500 ದಂಡ ವಿಧಿಸಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಬಾಲಾಪರಾಧಿಗಳ ವಿರುದ್ಧದ ವಿಚಾರಣೆ ಪ್ರಸ್ತುತ ಬಾಲ ನ್ಯಾಯ ಮಂಡಳಿ (ಜೆಜೆಬಿ) ಮುಂದೆ ಬಾಕಿಯಿದೆ.















