ಮೀನುಗಾರಿಕೆ ಹಾಗೂ ಬಂದರು ಇಲಾಖೆ ಕಾಮಗಾರಿಗಳ ಸ್ಥಳ ಪರಿಶೀಲನೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ 30: ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಬಂದರು ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ವಿಳಂಬವಾಗಿದ್ದು, ಈ ಬಗ್ಗೆ ರಾಜ್ಯಮಟ್ಟದ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕೊಡೇರಿಯಲ್ಲಿ 33 ಕೋಟಿ ರೂ ವೆಚ್ಚದ ಬ್ರೇಕ್ ವಾಟರ್ ಕಾಮಗಾರಿ ಜನವರಿ ಅಂತ್ಯದ ಒಳಗೆ ಮುಗಿಯಬೇಕಿತ್ತು, ಆದರೆ ಇದುವರೆಗೂ ಶೇ.20 ರಷ್ಟು ಕಾಮಗಾರಿ ಮಾತ್ರ ಮುಗಿದಿದ್ದು, ಇದುವರೆಗೂ ಪ್ರಗತಿ ಕಾಣದ ಕುರಿತು ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಚಿವ ಪೂಜಾರಿ, ಕಾಮಗಾರಿ ವಿಳಂಬಕ್ಕೆ ಕಾರಣಗಳ ಕುರಿತು ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸುವುದಾಗಿ ಮತ್ತು ಕಾಮಗಾರಿ ನಿರ್ವಹಿಸದೆ ಇರುವ ಗುತ್ತಿಗೆದಾರರ ಲೈಸೆನ್ಸ್ ರದ್ದು ಮತ್ತು ಕಪ್ಪು ಪಟ್ಟಿಗೆ ಸೇರ್ಪಡೆ ಮಾಡುವ ಕುರಿತಂತೆ ವರದಿ ನೀಡುವಂತೆ ಸೂಚಿಸಿದರು.

ಮಲ್ಪೆ 3 ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಅಗತ್ಯ ಸಣ್ಣಪುಟ್ಟ ಕಾರ್ಯಗಳನ್ನು ಪೂರ್ಣಗೊಳಿಸಿ, ಸಪ್ಟೆಂಬರ್ ಅಂತ್ಯದೊಳಗೆ ಮೀನುಗಾರಿಕಾ ಇಲಾಖೆಗೆ ಹಸ್ತಾಂತರಿಸುವಂತೆ ಬಂದರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮೀನುಗಾರರಿಗೆ 170 ಕೆ.ಎಲ್. ಸೀಮೆಎಣ್ಣೆ ವಿತರಿಸಲಾಗುತ್ತಿತ್ತು. ಆದರೆ ಜಿಲ್ಲೆಯಲ್ಲಿ 4000 ಕ್ಕೂ ಅಧಿಕ ನಾಡದೋಣಿ ಮೀನುಗಾರರು ಇರುವುದರಿಂದ ಹೆಚ್ಚುವರಿ 300 ಲೀಟರ್ ಸೀಮೆಎಣ್ಣೆ ಹೆಚ್ಚಳಕ್ಕೆ ಪ್ರಸ್ಥಾವನೆ ಸಲ್ಲಿಸುವುದಾಗಿ ತಿಳಿಸಿದ ಸಚಿವರು, 300 ಲೀಟರ್ ಸೀಮೆಎಣ್ಣೆ ದಾಸ್ತಾನು ಹಾಗೂ ಇತರ ವ್ಯವಸ್ಥೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮೀನುಗಾರರ ಉಳಿತಾಯ ಯೋಜನೆಯ ಹಣ ಸಕಾಲದಲ್ಲಿ ಪಾವತಿ ಮಾಡುವ ಬಗ್ಗೆ, ಏಕ ರೂಪದ ಸಂಕಷ್ಠ ಪರಿಹರ ನಿಧಿ ವಿತರಣೆ ಬಗ್ಗೆ, ನಾಡದೋಣಿಗಳ ಎಂಜಿನ್ ಸಬ್ಸಿಡಿ, ಮತ್ಸ್ಯಾಶ್ರಯ ಯೋಜನೆಯ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ರೀತಿ ವಿಳಂಬ ಮಾಡದೆ, ಪರಸ್ಪರ ಸಮನ್ವಯದಿಂದ ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಬಂದರು ಹಾಗೂ ಮೀನುಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸಚಿವ ಪೂಜಾರಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಬಂದರು, ಒಳನಾಡು ಜಲ ಸಾರಿಗೆ ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.