ಮೂಡುಬಿದಿರೆ:ಪ್ರತಿಯೊಬ್ಬರ ಶ್ರಮದಿಂದ ಆಧುನಿಕ ಭಾರತ ನಿರ್ಮಾಣ ಸಾಧ್ಯ:ಲೆ. ಜನರಲ್ ಅರುಣ್ ಅನಂತ ನಾರಾಯಣ್

ಮೂಡುಬಿದಿರೆ: ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ಶ್ರಮವಹಿಸುತ್ತಿದ್ದಾರೆ  ಎಂದು ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಹೇಳಿದರು.

ವಿದ್ಯಾಗಿರಿಯ ಕೆ. ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವತಿಯಿಂದ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಗೈದು ಮಾತನಾಡಿದ ಅವರು, ಇಂದಿನ ಪೀಳಿಗೆಗೆ ಸ್ವಾತಂತ್ರ‍್ಯವೆಂದರೆ ಏನನ್ನಾದರೂ ಸಾಧಿಸುವ ಅವಕಾಶ  ಎಂದು ಭಾಸವಾಗಬಹುದು, ಆದರೆ ನಮ್ಮ ಹಿರಿಯರು ಸರಿಯಾದ ಶಿಕ್ಷಣ ವೈದ್ಯಕೀಯ ಸೌಲಭ್ಯ ಮತ್ತು ಇನ್ನಿತರ ಮೂಲಭೂತ ಸೌಲಭ್ಯಗಳಿಲ್ಲದೇ ಬದುಕಿದ್ದರು. ನಿಜವಾದ ಸ್ವಾತಂತ್ರ‍್ಯ ಎಂದರೆ ಅಭಿವೃದ್ಧಿ ಪ್ರತಿಯೊಬ್ಬರಿಗೂ ತಲುಪಿದಾಗ ಹಾಗೂ ಪ್ರತಿಯೊಬ್ಬರೂ ಈ ಅಗತ್ಯ ಸೌಲಭ್ಯಗಳನ್ನು ಪಡೆದಾಗ ಸಾಧ್ಯವಾಗುವುದು.  

ಸ್ವಾತಂತ್ರ‍್ಯ ಹೋರಾಟದಲ್ಲಿ ಹಿರಿಯರು ನೀಡಿದ ತ್ಯಾಗಗಳಿಗೆ ಗೌರವ ಸಲ್ಲಿಸಿದ ಅವರು, “ಆಧುನಿಕ ಭಾರತವನ್ನು ಒಬ್ಬ ವ್ಯಕ್ತಿ ಮಾತ್ರ ನಿರ್ಮಿಸಲು ಸಾಧ್ಯವಿಲ್ಲ,ಅದಕ್ಕೆ ಸಮೂಹ ಶ್ರಮ ಅಗತ್ಯ. ಶಿಕ್ಷಕರು ಕೇವಲ ವೃತ್ತಿಯಲ್ಲಿಲ್ಲ, ಸೇವೆಯಲ್ಲಿ ಇದ್ದು, ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತವನ್ನು ಕಟ್ಟುವವರಾಗಿದ್ದಾರೆ ಎಂದರು. ಇಂತಹ ಮೌಲ್ಯಯುತ ಶಿಕ್ಷಣ ಪಡೆದ ವಿಧ್ಯಾರ್ಥಿ ಸಮೂಹದಿಂದ ನವ ಭಾರತದ ನಿರ್ಮಾಣ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮೂಲ್ಕಿ-ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಸಂಸ್ಥೆಯ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ ವಿನಯ ಆಳ್ವ ಡಾ. ಗ್ರೀಷ್ಮಾ, ಡಾ.ಹನಾ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಉಪನ್ಯಾಸಕ ರಾಜೇಶ್ ಡಿಸೋಜ ಹಾಗೂ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.