ಸಂಕಷ್ಟ ಸಮಯದಲ್ಲಿ ದೇಶ ಮುನ್ನಡೆಸಿದ ಶ್ರೇಷ್ಠ ಪ್ರಧಾನಿ ನರೇಂದ್ರ ಮೋದಿ: ಯಶ್ ಪಾಲ್ ಸುವರ್ಣ

ಉಡುಪಿ: ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಪ್ರಧಾನಿಯಾಗಿ ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ದೇಶದ ಚುಕ್ಕಾಣಿ ಹಿಡಿದು ಕಳೆದ 7 ವರ್ಷಗಳಲ್ಲಿ ಮೋದಿ ಅವರು ತಮ್ಮ ಅತ್ಯುತ್ತಮ ಕಾರ್ಯವೈಖರಿಯಿಂದ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಯೋಜನೆಗಳ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಸ್ವಾತಂತ್ರ್ಯ ಪೂರ್ವದಿಂದ ದೇಶದ ಜನರ ಕನಸಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ, ಆರ್ಟಿಕಲ್ 370 ವಿಧಿ ರದ್ದು,  ಜಿಎಸ್ಟಿ , ಅಂತಾರಾಷ್ಟ್ರೀಯ ನೀತಿಗಳ ಸುಧಾರಣೆ, ನೂತನ ರಾಷ್ಟೀಯ ಶಿಕ್ಷಣ ನೀತಿ, ರಾಷ್ಟ್ರೀಯ ಭದ್ರತೆಯಲ್ಲಿ ದಿಟ್ಟ ನಿಲುವುಗಳ ಮೂಲಕ ದೇಶದ ನಾಗರಿಕರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

ಕೊರೊನಾ ಮಹಾಮಾರಿಯ ಸಂಕಷ್ಟ ಸಮಯದಲ್ಲಿ ದೇಶವನ್ನು ಸಮರ್ಥವಾಗಿ ಮುನ್ನಡೆಸಿ ವೈದ್ಯಕೀಯ ವ್ಯವಸ್ಥೆಯನ್ನು ಸಧೃಢಗೊಳಿಸಿ, ದೇಶದ 130 ಕೋಟಿ ಜನರಿಗೂ ಲಸಿಕೆ ನೀಡಲು ಕ್ರಮಗಳನ್ನು ಕೈಗೊಳ್ಳುವ ಮೂಲಕ ವಿಶ್ವದ ಅತೀ ದೊಡ್ಡ ಲಸಿಕಾ ಅಭಿಯಾನಕ್ಕೆ ಮುಂದಾಗಿರುವ  ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿಮಾನ ಪೂರ್ವಕವಾಗಿ ಅಭಿನಂದಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.