ಬೆಂಗಳೂರು: ನದಿ, ತೊರೆ, ಹಳ್ಳ, ಕೆರೆ, ಜಲಾಶಯಗಳ ಪಾತ್ರಗಳಲ್ಲಿರುವ ಮರಳು ಗಣಿಗಾರಿಕೆ ನಡೆಸಿ, ಅಗ್ಗದ ದರದಲ್ಲಿ ಗ್ರಾಹಕರಿಗೆ ಮರಳು ಪೂರೈಕೆ ಮಾಡುವ ಹೊಸ ಮರಳು ನೀತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಗ್ರಾಮೀಣ ವಸತಿ ಯೋಜನೆಗಳಿಗೆ ಮತ್ತು ಗ್ರಾಮೀಣ ಜನರು ಮನೆ ಕಟ್ಟಿಕೊಳ್ಳಲು ರಿಯಾಯ್ತಿ ದರದಲ್ಲಿ ಮರಳು ಪೂರೈಕೆ ಮಾಡಲು ನೀತಿಯಲ್ಲಿ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡದಲ್ಲಿ ಪರಂಪರಾಗತವಾಗಿ ನದಿಯಲ್ಲಿ ಮುಳುಗಿ ಮರಳು ತೆಗೆಯುವುದಕ್ಕೂ ಅವಕಾಶ ನೀಡಲಾಗಿದೆ. ಆದರೆ, ಇದಕ್ಕೆ ಯಾವುದೇ ರೀತಿಯ ಯಂತ್ರಗಳನ್ನು ಬಳಸುವಂತಿಲ್ಲ. ಸ್ಥಳೀಯರು ತಮ್ಮ ಮನೆಗಳನ್ನು ಕಟ್ಟಿಕೊಳ್ಳಲು ಈ ರೀತಿಯಲ್ಲಿ ಮರಳು ತೆಗೆಯಬಹುದಾಗಿದೆ. ಪರಿಸರಕ್ಕೆ ಹಾನಿಯಾಗುವಂತೆ ಮರಳು ತೆಗೆಯುವುದಕ್ಕೆ ಅವಕಾಶವಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.
ಪ್ರತ್ಯೇಕ ದರ ನಿಗದಿ:
ಮರಳು ಗಣಿಗಾರಿಕೆ ಮಾಡಿ ಅದರ ಸಾಗಣೆಗಾಗಿ ಮೂರು ಹಂತಗಳನ್ನು ರೂಪಿಸಲಾಗಿದೆ. ಗ್ರಾಮ ಮಟ್ಟ, ನದಿ ಪಾತ್ರ ಮತ್ತು ಸಮುದ್ರ ತೀರ ಎಂದು ಮೂರು ಹಂತಗಳನ್ನು ನಿಗದಿಪಡಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಮಾರಲು ಪ್ರತಿ ಟನ್ಗೆ ₹300, ನದಿ ಸೇರುವ ಪಾತ್ರಗಳು ಮತ್ತು ಪಟ್ಟಣಗಳಿಗೆ ಟನ್ಗೆ ₹700 ನಿಗದಿ ಮಾಡಲಾಗಿದೆ ಎಂದರು.
ಗ್ರಾಮಪಂಚಾಯ್ತಿ ಮಟ್ಟದಲ್ಲಿ ಮರಳು ಶೇಖರಣೆ ಮಾಡಿ ಮಾರಾಟ ಮಾಡಲು ಅವಕಾಶವಿದೆ. ಜತೆಗೆ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಖನಿಜ ಟ್ರಸ್ನಿಂದ ಶೇ 2 ರಷ್ಟು ನಿಧಿ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ಸರ್ಕಾರಕ್ಕೆ ಬರುವ ಶೇ 50 ರಷ್ಟು ರಾಯಲ್ಟಿಯಲ್ಲಿ ಶೇ 25 ಆಯಾ ಪಂಚಾಯಿತಿಗಳಿಗೆ ನೀಡಲಾಗುವುದು. ಸರ್ಕಾರದ ವಸತಿ ಯೋಜನೆಯೂ ಸೇರಿದಂತೆ ವಿವಿಧ ಯೋಜನೆಗಳು ಮತ್ತು ಬಡವರಿಗೆ ರಿಯಾಯ್ತಿ ದರದಲ್ಲಿ ಮರಳು ನೀಡುವ ಅಧಿಕಾರವನ್ನು ಆಯಾ ಗ್ರಾಮ ಪಂಚಾಯಿತಿಗಳಿಗೇ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ‘ಮರಳು ಸಮಿತಿ’ಗಳ ರಚನೆ.
ಮರಳು ಗಣಿಗಾರಿಕೆ ಮತ್ತು ಸಾಗಣೆಯ ಉಸ್ತುವಾರಿಯನ್ನು ಈ ಸಮಿತಿಗಳು ಮೇಲುಸ್ತುವಾರಿ ವಹಿಸಲಿವೆ. ಯಾವುದೇ ನಿಯಮಗಳ ಉಲ್ಲಂಘನೆ ಮಾಡಿದಲ್ಲಿ ದಂಡಿಸುವ ಅಧಿಕಾರ ನೀಡಲಾಗಿದೆ.
ಸ್ವಂತ ಬಳಕೆಗಾಗಿ ಟ್ರ್ಯಾಕ್ಟರ್, ಎತ್ತಿನ ಬಂಡಿ, ದ್ವಿಚಕ್ರವಾಹನಗಳಲ್ಲಿ ಮರಳು ಸಾಗಣೆ ಮಾಡಿದರೆ ಪ್ರಕರಣ ದಾಖಲಿಸುವುದಿಲ್ಲ. ಆದರೆ, ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡುವಂತಿಲ್ಲ. ಒಂದು ವೇಳೆ ಸಾಗಣಿಕೆ ಮಾಡಿದರೆ ಪ್ರಕರಣ ದಾಖಲಿಸಲಾಗುವುದು.
ದ್ವಿಚಕ್ರ ವಾಹನ, ಎತ್ತಿನಗಾಡಿ, ಟ್ರ್ಯಾಕ್ಟರ್, ಕತ್ತೆ ಮೇಲೆ ಮರಳು ಕೊಂಡೊಯ್ಯವ ರೈತರು ಮತ್ತು ಬಡವರಿಗೆ ರಾಯಧನದ ವಿನಾಯಿತಿ ನೀಡಲಾಗುವುದು.
ಪಟ್ಟಾ ಭೂಮಿಯಲ್ಲಿ ಮರಳು ಗಣಿಗಾರಿಕೆ ನಿಷೇಧಿಸಲಾಗಿದ್ದರೂ, ಜಿಲ್ಲಾ ಮತ್ತು ತಾಲ್ಲೂಕು ಮರಳು ಸಮಿತಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ. ಇದಕ್ಕೆ ಸಮಿತಿಗಳು ಸಮಜಾಯಿಷಿ ನೀಡಬೇಕು.
ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ಗಣಿಗಾರಿಕೆ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

















