ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಎನ್‌ಡಿಎ ಅಭ್ಯರ್ಥಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿಪಕ್ಷಗಳು ಮಂಗಳವಾರ ಅಭ್ಯರ್ಥಿಯನ್ನು ಘೋಷಿಸಿದೆ.

ಒಡಿಶಾದ ಬುಡಕಟ್ಟು ನಾಯಕಿ, ಝಾರ್ಖಂಡ್‌ನ‌ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಕಣಕ್ಕಿಳಿಸುವುದಾಗಿ ಘೋಷಿಸಿದ್ದು, ಬಿಜೆಪಿಯ ಮಾಜಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಯಶವಂತ್‌ ಸಿನ್ಹಾರನ್ನು ವಿಪಕ್ಷಗಳು ಕಣಕ್ಕಿಳಿಸಿವೆ.

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸಂಸದೀಯ ಪಕ್ಷವು ಮಂಗಳವಾರ ಸಭೆ ನಡೆಸಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ.

ಸಂಸತ್‌ ಭವನದಲ್ಲಿ ಎನ್‌ಸಿಪಿ ನಾಯಕ ಶರದ್‌ ಪವಾರ್‌ ನೇತೃತ್ವದಲ್ಲಿ ನಡೆದ ಸಭೆಯ ಅನಂತರ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು, ಯಶವಂತ್‌ ಸಿನ್ಹಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದರು.

ರಾಷ್ಟ್ರಪತಿ ಚುನಾವಣೆಗಾಗಿ ಜೂನ್ 29ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜುಲೈ 18ರಂದು ಮತದಾನ ನಡೆಯಲಿದೆ.